ಬೆಳಗಾವಿ: ರಾಜ್ಯದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್ ಅವರಿಗೆ ಇಡಿ (ಜಾರಿ ನಿರ್ದೇಶನಾಲಯ) ಶಾಕ್ ನೀಡಿದ್ದು, ಬೆಳ್ಳಂಬೆಳಗ್ಗೆ ಅವರ ನಿವಾಸಗಳು ಮತ್ತು ಸಂಬಂಧಪಟ್ಟ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ (ಸಹೋದರಿ ಮಹಾದೇವಿ ಅವರ ಪತಿ) ಆಗಿರುವ ವೈ. ಮಂಜುನಾಥ್ ಅವರ ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸಿನ ವ್ಯವಹಾರಗಳ ಆರೋಪದಡಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಮೈಸೂರಿನಲ್ಲಿರುವ ಕುವೆಂಪು ನಗರದಲ್ಲಿರುವ ಮಂಜುನಾಥ್ ಅವರ ಮನೆ, ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ನಿವಾಸ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ದಾಳಿ ನಡೆದಿದೆ. ವಿಜಯನಗರದ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಮಂಜುನಾಥ್ ಅವರ ಎರಡು ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿ ಮಾಜಿ ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರರಾದ ಮಂಜುನಾಥ್, ದೀರ್ಘಕಾಲದಿಂದ ಅಬಕಾರಿ ಇಲಾಖೆಯಲ್ಲಿ ಪ್ರಭಾವಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅಬಕಾರಿ ಇಲಾಖೆಯ ಡಿಸಿ ಆಗಿದ್ದಾಗ, 2012ರ ಜೂನ್ 27ರಂದು ಲೋಕಾಯುಕ್ತರು ದಾಳಿ ನಡೆಸಿದ್ದರು.
ಮಂಜುನಾಥ್ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಕುಟುಂಬಸ್ಥರ ಹೆಸರಿನಲ್ಲಿ ಅಕ್ರಮವಾಗಿ ಬಾರ್ಗಳ ಮಾಲೀಕತ್ವ ಹೊಂದಿದ್ದಾರೆ ಎಂಬ ಆರೋಪವಿದೆ. ಜಾರಕಿಹೊಳಿ ಅವರ ಸಹೋದರಿ ಮಹಾದೇವಿ ಅವರ ಹೆಸರಿನಲ್ಲಿಯೂ ಬಾರ್ ಪರವಾನಗಿ ಪಡೆದಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಇಂದು ಬೆಳಿಗ್ಗೆ ಗೋವಾ ಮತ್ತು ಬೆಂಗಳೂರಿನಿಂದ ಆಗಮಿಸಿದ ಇಡಿ ಅಧಿಕಾರಿಗಳು, ಅರೆಸೇನಾ ಪಡೆಯ ಬಿಗಿ ಭದ್ರತೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.