ಬೆಂಗಳೂರು: ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸುತ್ತಿರುವುದು ಇದೆಲ್ಲಾ ನಾಟಕ. ಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗರ ಲೀಡರ್ ಆಗಬಾರದೆಂದು ಈ ರೀತಿ ಮಾಡುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಬಿಡದಿ ಟೌನ್ಶಿಪ್ ನಿರ್ಮಾಣ ವಿಚಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಈ ಯೋಜನೆಯನ್ನು ಸ್ವತಃ ಕುಮಾರಸ್ವಾಮಿ ಅವರೇ ಪ್ರಾರಂಭಿಸಿದ್ದರು. ಹಾಗಿದ್ದ ಮೇಲೆ ಈಗೇಕೆ ವಿರೋಧ
ಮಾಡುತ್ತಿದ್ದಾರೆ? ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು ಸಹ ಈ ಯೋಜನೆಯ ವ್ಯಾಪ್ತಿಯಲ್ಲಿ ಬರುತ್ತದೆ. ಈಗ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ನಾಟಕ ಎಂದು ಪಾಟೀಲ್ ಟೀಕಿಸಿದರು.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದರಿಂದಲೇ ಈ ಎಲ್ಲ ನಾಟಕಗಳನ್ನು ಕುಮಾರಸ್ವಾಮಿ ನಡೆಸುತ್ತಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಒಕ್ಕಲಿಗ ಸಮುದಾಯದ ಪ್ರಬಲ ನಾಯಕರನ್ನಾಗಿ ಸಹಿಸಲು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಾಧ್ಯವಾಗುತ್ತಿಲ್ಲ. ರೈತರ ವಿರೋಧವಿದ್ದರೆ ಅದನ್ನು ಅರ್ಥ ಮಾಡಿಕೊಳ್ಳಬಹುದು.
ಆದರೆ, ಇದು ಕೇವಲ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಎಂ.ಬಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಅಂದು ತಾವೇ ಈ ಯೋಜನೆಗೆ ಚಾಲನೆ ನೀಡಿದಾಗ ನೋಟಿಫಿಕೇಶನ್ ವಾಪಸ್ ಪಡೆಯಲು ಏಕೆ ಮುಂದಾಗಲಿಲ್ಲ? ಈಗ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಅವರು ಪ್ರಶ್ನಿಸಿದರು.