ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಜಾಮೀನು ಅರ್ಜಿ ಸಲ್ಲಿಸಲು ವಿಧಿಸಲಾದ ಒಂದು ವರ್ಷದ ನಿರ್ಬಂಧ ಸಡಿಲಿಸುವಂತೆ ಕೋರಿ ನಟ ದರ್ಶನ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ರಕ್ಷಿತವಾಗಿದೆ. ದೀರ್ಘಾವಧಿಯ ಬಂಧನವನ್ನು ಕಾಲಕಾಲಕ್ಕೆ ನ್ಯಾಯಾಲಯ ಪರಿಶೀಲಿಸಬೇಕು. ದೀರ್ಘ ಬಂಧನದಿಂದಾಗಿ ತಮ್ಮ ವೃತ್ತಿ ಜೀವನ, ಜೀವನೋಪಾಯ ಮತ್ತು ಕುಟುಂಬಕ್ಕೆ ತೀವ್ರ ಹಾನಿಯಾಗಿದೆ. ತಾಯಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿದ್ದಾರೆ. ಒಂದು ವರ್ಷ ಜಾಮೀನು ನೀಡದಿರುವ ಆದೇಶ ವ್ಯಾಪಕ ಪರಿಣಾಮ ಬೀರಬಹುದು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
'ಮೇ 15ರಂದು ರಿಟ್ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆಯ ಪ್ರಗತಿಯನ್ನು ಗಮನಿಸಿರುವುದು ಖುಷಿ ಇದೆ. ಒಂದು ವರ್ಷದೊಳಗೆ ವಿಚಾರಣೆಯಲ್ಲಿ ಯಾವುದೇ ಗಣನೀಯ ಪ್ರಗತಿ ಕಾಣದಿದ್ದರೆ ಅರ್ಜಿದಾರರು ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿರುವುದನ್ನು ಗೌರವಿಸುತ್ತೇನೆ' ಎಂದು ತಿಳಿಸಿದ್ದಾರೆ.
ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ 2025ರ ಆಗಸ್ಟ್ನಿಂದಲೂ ಜೈಲಿನಲ್ಲಿದ್ದಾರೆ. ಸಂಬಂಧಪಟ್ಟ ನ್ಯಾಯಾಲಯಗಳು ಹೊರಡಿಸಿದ ಎಲ್ಲ ನಿರ್ದೇಶನಗಳನ್ನು ಪಾಲಿಸಿದ್ದಾರೆ. ಯಾವುದೇ ಹಂತದಲ್ಲೂ ವಿಚಾರಣೆಗೆ ಹಾಜರಾಗುವುದರಲ್ಲಿ ವಿಳಂಬ ಮಾಡಿಲ್ಲ. ವಿಚಾರಣೆಯ ಪ್ರಗತಿಗೆ ಅಡ್ಡಿಪಡಿಸಲು ಪ್ರಯತ್ನಿಸಿಲ್ಲ. ನ್ಯಾಯಾಂಗ ಪ್ರಕ್ರಿಯೆಯ ಉದ್ದಕ್ಕೂ ಸಹಕರಿಸಿದ್ದಾರೆ. ಕಾನೂನಿನ ಪ್ರಕಾರ ವಿಚಾರಣೆ ಎದುರಿಸಲು ಸಿದ್ಧರಿದ್ದಾರೆ' ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.
'ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕಷ್ಟು ಸಾಕ್ಷಿಗಳ ವಿಚಾರಣೆ ಮಾಡುವುದಕ್ಕೆ ಪ್ರಸ್ತಾಪಿಸಿದೆ. ಆದರೆ, ವಿಳಂಬದ ಹೊರತಾಗಿಯೂ ಕೆಲವೇ ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದೆ. ಇದು ಸುದೀರ್ಘ ಕಾಲದವರೆಗೆ ವಿಚಾರಣೆ ಮುಂದುವರಿಯುವ ಸಾಧ್ಯತೆಯನ್ನು ತೋರಿಸುತ್ತದೆ. ಮೇ 15ರ ಆದೇಶದಲ್ಲಿ ನ್ಯಾಯಾಲಯ ತ್ವರಿತ ವಿಚಾರಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ಆ ನಂತರವೂ ಕೇವಲ ಇಬ್ಬರು ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದೆ' ಎಂದು ತಿಳಿಸಲಾಗಿದೆ.
ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್, ದರ್ಶನ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಅಲ್ಲದೆ, ಪ್ರಮುಖ 60 ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.
ವಿಚಾರಣಾ ನ್ಯಾಯಾಲಯ ದಿನನಿತ್ಯ ಸಾಕ್ಷಿಗಳ ವಿಚಾರಣೆ ನಡೆಸಿ ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ಬಳಿಕ ದರ್ಶನ್ ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸೂಚನೆ ನೀಡಿತ್ತು.