ಬೆಂಗಳೂರು: ನಗರದ ಕಸದ ಸಮಸ್ಯೆ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ಅಗತ್ಯವಿರುವ ಕಡೆ ಹೆಚ್ಚುವರಿ ಆಟೋ ಟಿಪ್ಪರ್ಗಳನ್ನು ನಿಯೋಜಿಸಬೇಕು. ಸಂಜೆ ವೇಳೆಯಲ್ಲೂ ಕಸ ಸಂಗ್ರಹಣೆ ನಡೆಯುವಂತೆ ಕ್ರಮ ಕೈಗೊಂಡು ಯಾವುದೇ ಕಾರಣಕ್ಕೂ ರಸ್ತೆ ಬದಿಯಲ್ಲಿ ಕಸ ಸೇರದಂತೆ ನೋಡಿಕೊಳ್ಳಬೇಕೆಂದುಪ ಗ್ರೇಟರ್ ಬೆಂಗಳೂರು ಆಡಳಿತ (GBA) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಬೆಂಗಳೂರು ದಕ್ಷಿಣ ನಗರ ನಿಗಮ (BSCC) ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಎಲ್ಲೆಡೆ ಸ್ವಚ್ಛತೆಯನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಸ್ತೆ ಬದಿಯಲ್ಲಿ ಕಸ ಎಸೆಯುವುದನ್ನು ತಡೆಯುವಂತೆ ಸೂಚಿಸಿದ ಅವರು, ಕಸ ಸಂಗ್ರಹಣೆ ವಾಹನಗಳು ಸಮಯಕ್ಕೆ ಬರದಿದ್ದರೆ ಅಥವಾ ಯಾವುದೇ ಪ್ರದೇಶದಲ್ಲಿ ಕಸ ರಾಶಿಯಾಗಿದ್ದರೆ ಸಾರ್ವಜನಿಕರು ಕೂಡಲೇ ಪಾಲಿಕೆಗೆ ಮಾಹಿತಿ ನೀಡಬೇಕು. ಮಾಹಿತಿ ದೊರೆತ ತಕ್ಷಣ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕೆಂದು ಹೇಳಿದರು.
ನಗರದ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕಾದರೆ ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅಗತ್ಯ. ನಾಗರಿಕರು ಪಾಲಿಕೆಯೊಂದಿಗೆ ಕೈಜೋಡಿಸಿದರೆ ಮಾತ್ರ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿವಾರಿಸಲು ಸಾಧ್ಯ ಎಂದು ತಿಳಿಸಿದರು.
ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಸ್ವಯಂಸೇವಕರು ರಸ್ತೆ ಬದಿಯಲ್ಲಿ ಕಸ ಎಸೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಕಂಡರೆ ತಕ್ಷಣ ಪಾಲಿಕೆಯ ಗಮನಕ್ಕೆ ತರಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯಲಚೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕಸದ ಸಮಸ್ಯೆ ನಿವಾರಣೆಗೆ ಸೂಕ್ತ ಖಾಲಿ ಜಾಗ ಗುರುತಿಸಿ ಆದ್ಯತೆಯ ಮೇರೆಗೆ ತ್ಯಾಜ್ಯ ವರ್ಗಾವಣೆ ಕೇಂದ್ರ (Transfer Station) ನಿರ್ಮಾಣ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈಜಿಪುರ ಮೇಲ್ಸೇತುವೆ ಕಾಮಗಾರಿ ವೇಗಗೊಳಿಸಲು ಸೂಚನೆ
ಪರಿಶೀಲನೆ ವೇಳೆ ಈಜಿಪುರ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗುತ್ತಿಗೆದಾರರಿಗೆ ಹೆಚ್ಚುವರಿ ಕಾರ್ಮಿಕರನ್ನು ನಿಯೋಜಿಸುವಂತೆ ಮಹೇಶ್ವರ್ ರಾವ್ ಸೂಚಿಸಿದರು.
ಪೋರ್ಟಲ್ ಫ್ರೇಮ್ ನಿರ್ಮಾಣ ಕಾಮಗಾರಿಗೆ ಪ್ರತಿದಿನ ಕನಿಷ್ಠ 40 ಕಾರ್ಮಿಕರನ್ನು ನಿಯೋಜಿಸಿ, ನಿಗದಿತ ಅವಧಿಯೊಳಗೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.