ಬೆಂಗಳೂರು: ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿರುವ ದೇಣಿಗೆಯ ದುರ್ಬಳಕೆ ಆರೋಪಗಳು ಅತ್ಯಂತ ಆತಂಕಕಾರಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದು, ಈ ಪ್ರಕರಣದಲ್ಲಿ ನ್ಯಾಯಸಮ್ಮತ, ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಮ ಮಂದಿರಕ್ಕೆ ದೇಶದ ಕೋಟ್ಯಾಂತರ ಭಕ್ತರು ತಮ್ಮ ನಂಬಿಕೆ, ಭಕ್ತಿ ಮತ್ತು ತ್ಯಾಗದ ಸಂಕೇತವಾಗಿ ದೇಣಿಗೆ ನೀಡಿದ್ದಾರೆ. ಪ್ರತಿಯೊಂದು ರೂಪಾಯಿಯೂ ಭಕ್ತರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಆ ವಿಶ್ವಾಸಕ್ಕೆ ಧಕ್ಕೆ ಉಂಟಾಗಿದ್ದರೆ ಅದು ಕೇವಲ ಭಕ್ತರಿಗೆ ಮಾತ್ರವಲ್ಲ, ಧಾರ್ಮಿಕ ಸಂಸ್ಥೆಗಳು ಪಾಲಿಸಬೇಕಾದ ಮೌಲ್ಯಗಳಿಗೂ ಮಾಡಿದ ದ್ರೋಹವಾಗಿದೆ ಎಂದು ಹೇಳಿದ್ದಾರೆ.
ದೇವಾಲಯಗಳು ಹಾಗೂ ಸಾರ್ವಜನಿಕ ದೇಣಿಗೆಗಳಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲಿ ಅತ್ಯುನ್ನತ ಮಟ್ಟದ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು ಎಂದು ಅಭಿಪ್ರಾಯಪಟ್ಟರು.
ಈ ಪ್ರಕರಣದಲ್ಲಿ ನ್ಯಾಯಸಮ್ಮತ, ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಯಾರೇ ತಪ್ಪಿತಸ್ಥರಾಗಿದ್ದರೂ, ಅವರ ಹುದ್ದೆ ಅಥವಾ ಪ್ರಭಾವವನ್ನು ಲೆಕ್ಕಿಸದೆ ಕಾನೂನಿನ ಮುಂದೆ ಉತ್ತರದಾಯಕರನ್ನಾಗಿ ಮಾಡಬೇಕು. ಆಗ ಮಾತ್ರ ಕೋಟ್ಯಂತರ ಭಕ್ತರ ವಿಶ್ವಾಸ ಮರುಸ್ಥಾಪನೆಯಾಗುತ್ತದೆ. ಧಾರ್ಮಿಕ ನಂಬಿಕೆಯನ್ನು ಖಾಸಗಿ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.