ಬೆಂಗಳೂರು: ರಾಜ್ಯ ಸರ್ಕಾರ ಮೇ ಅಂತ್ಯದೊಳಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸುವುದಾಗಿ ಘೋಷಿಸಿದ್ದರೂ, ಕರ್ನಾಟಕದ ಸರ್ಕಾರಿ ಪದವಿಪೂರ್ವ ಕಾಲೇಜುಗಳ (ಪಿಯುಸಿ) ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಪುಸ್ತಕಗಳು ಲಭ್ಯವಾಗಿಲ್ಲ.
ಇದರಿಂದ ಶೈಕ್ಷಣಿಕ ವರ್ಷ ಆರಂಭವಾಗಿ ಹಲವು ವಾರಗಳು ಕಳೆದರೂ ವಿದ್ಯಾರ್ಥಿಗಳು ಪಾಠ ಕಲಿಯಲು ಸಮಸ್ಯೆ ಅನುಭವಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಇದೂವರೆಗೆ ಒಂದರಿಂದ ಹತ್ತನೇ ತರಗತಿಯವರೆಗೆ ಮಾತ್ರ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದೆ. ಆದರೆ, ಪಿಯುಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳ ವಿತರಣೆ ವಿಳಂಬವಾಗಿದೆ.
ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ಕರ್ನಾಟಕ ಘಟಕದ ಪ್ರಕಾರ, ಬೆಂಗಳೂರು, ಯಾದಗಿರಿ, ಹಾಸನ, ತುಮಕೂರು, ಮೈಸೂರು, ಬಳ್ಳಾರಿ ಹಾಗೂ ರಾಯಚೂರು ಸೇರಿದಂತೆ ಕನಿಷ್ಠ ಏಳು ಜಿಲ್ಲೆಗಳ ಸರ್ಕಾರಿ ಪಿಯು ಕಾಲೇಜುಗಳಿಗೆ ಭಾಗಶಃ ಪುಸ್ತಕಗಳು ಮಾತ್ರ ತಲುಪಿವೆ. ಬಂದಿರುವ ಪುಸ್ತಕಗಳು ವಿದ್ಯಾರ್ಥಿಗಳಿಗೆ ಸಾಕಾಗುತ್ತಿಲ್ಲ ಎಂದು ಆರೋಪಿಸಿದೆ.
ಅಭಿವೃದ್ಧಿ ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ ವಿ.ಪಿ. ಮಾತನಾಡಿ, ಈ ವಿಳಂಬವು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪಿಯು ಶಿಕ್ಷಣ ಅತ್ಯಂತ ಮಹತ್ವದ ಹಂತವಾಗಿದೆ. ಶ್ರೀಮಂತ ಕುಟುಂಬಗಳ ವಿದ್ಯಾರ್ಥಿಗಳು ಖಾಸಗಿ ಸಂಪನ್ಮೂಲಗಳು, ಡಿಜಿಟಲ್ ಸಾಧನಗಳು ಮತ್ತು ಇತರ ಅಧ್ಯಯನ ಸಾಮಗ್ರಿಗಳನ್ನು ಬಳಸಿಕೊಳ್ಳಬಹುದು. ಆದರೆ ಬಡ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳೇ ಪ್ರಮುಖ ಕಲಿಕಾ ಸಾಧನ. ಆದ್ದರಿಂದ ಮುಖ್ಯಮಂತ್ರಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.
AIDSO ರಾಜ್ಯ ಉಪಾಧ್ಯಕ್ಷೆ ಅಪೂರ್ವಾ ಸಿ.ಎಂ. ಮಾತನಾಡಿ, ಈ ವಿಳಂಬವು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.
ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳ ಮಕ್ಕಳು ಖಾಸಗಿ ಕಾಲೇಜುಗಳಲ್ಲಿ ಓದುತ್ತಾರೆ. ಆದರೆ, ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಉಚಿತ ಪಠ್ಯಪುಸ್ತಕಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರದ ಈ ನಿರ್ಲಕ್ಷ್ಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಹೇಳಿದರು.
ಇಂತಹ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಶಿಕ್ಷಣದ ಖಾಸಗೀಕರಣಕ್ಕೆ ಮತ್ತಷ್ಟು ಉತ್ತೇಜನ ಸಿಗುವ ಅಪಾಯವಿದೆ ಎಂದೂ ಕಳವಳ ವ್ಯಕ್ತಪಡಿಸಿದ್ದಾರೆ.