ಸಂಗ್ರಹ ಚಿತ್ರ 
ರಾಜ್ಯ

ಶೈಕ್ಷಣಿಕ ವರ್ಷ ಆರಂಭವಾದರೂ ಇನ್ನೂ ಸಿಗದ PU ಪಠ್ಯಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ರಾಜ್ಯ ಸರ್ಕಾರ ಇದೂವರೆಗೆ ಒಂದರಿಂದ ಹತ್ತನೇ ತರಗತಿಯವರೆಗೆ ಮಾತ್ರ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದೆ. ಆದರೆ, ಪಿಯುಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳ ವಿತರಣೆ ವಿಳಂಬವಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮೇ ಅಂತ್ಯದೊಳಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸುವುದಾಗಿ ಘೋಷಿಸಿದ್ದರೂ, ಕರ್ನಾಟಕದ ಸರ್ಕಾರಿ ಪದವಿಪೂರ್ವ ಕಾಲೇಜುಗಳ (ಪಿಯುಸಿ) ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಪುಸ್ತಕಗಳು ಲಭ್ಯವಾಗಿಲ್ಲ.

ಇದರಿಂದ ಶೈಕ್ಷಣಿಕ ವರ್ಷ ಆರಂಭವಾಗಿ ಹಲವು ವಾರಗಳು ಕಳೆದರೂ ವಿದ್ಯಾರ್ಥಿಗಳು ಪಾಠ ಕಲಿಯಲು ಸಮಸ್ಯೆ ಅನುಭವಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಇದೂವರೆಗೆ ಒಂದರಿಂದ ಹತ್ತನೇ ತರಗತಿಯವರೆಗೆ ಮಾತ್ರ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದೆ. ಆದರೆ, ಪಿಯುಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳ ವಿತರಣೆ ವಿಳಂಬವಾಗಿದೆ.

ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ಕರ್ನಾಟಕ ಘಟಕದ ಪ್ರಕಾರ, ಬೆಂಗಳೂರು, ಯಾದಗಿರಿ, ಹಾಸನ, ತುಮಕೂರು, ಮೈಸೂರು, ಬಳ್ಳಾರಿ ಹಾಗೂ ರಾಯಚೂರು ಸೇರಿದಂತೆ ಕನಿಷ್ಠ ಏಳು ಜಿಲ್ಲೆಗಳ ಸರ್ಕಾರಿ ಪಿಯು ಕಾಲೇಜುಗಳಿಗೆ ಭಾಗಶಃ ಪುಸ್ತಕಗಳು ಮಾತ್ರ ತಲುಪಿವೆ. ಬಂದಿರುವ ಪುಸ್ತಕಗಳು ವಿದ್ಯಾರ್ಥಿಗಳಿಗೆ ಸಾಕಾಗುತ್ತಿಲ್ಲ ಎಂದು ಆರೋಪಿಸಿದೆ.

ಅಭಿವೃದ್ಧಿ ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ ವಿ.ಪಿ. ಮಾತನಾಡಿ, ಈ ವಿಳಂಬವು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಿಯು ಶಿಕ್ಷಣ ಅತ್ಯಂತ ಮಹತ್ವದ ಹಂತವಾಗಿದೆ. ಶ್ರೀಮಂತ ಕುಟುಂಬಗಳ ವಿದ್ಯಾರ್ಥಿಗಳು ಖಾಸಗಿ ಸಂಪನ್ಮೂಲಗಳು, ಡಿಜಿಟಲ್ ಸಾಧನಗಳು ಮತ್ತು ಇತರ ಅಧ್ಯಯನ ಸಾಮಗ್ರಿಗಳನ್ನು ಬಳಸಿಕೊಳ್ಳಬಹುದು. ಆದರೆ ಬಡ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳೇ ಪ್ರಮುಖ ಕಲಿಕಾ ಸಾಧನ. ಆದ್ದರಿಂದ ಮುಖ್ಯಮಂತ್ರಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

AIDSO ರಾಜ್ಯ ಉಪಾಧ್ಯಕ್ಷೆ ಅಪೂರ್ವಾ ಸಿ.ಎಂ. ಮಾತನಾಡಿ, ಈ ವಿಳಂಬವು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.

ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳ ಮಕ್ಕಳು ಖಾಸಗಿ ಕಾಲೇಜುಗಳಲ್ಲಿ ಓದುತ್ತಾರೆ. ಆದರೆ, ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಉಚಿತ ಪಠ್ಯಪುಸ್ತಕಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರದ ಈ ನಿರ್ಲಕ್ಷ್ಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಹೇಳಿದರು.

ಇಂತಹ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಶಿಕ್ಷಣದ ಖಾಸಗೀಕರಣಕ್ಕೆ ಮತ್ತಷ್ಟು ಉತ್ತೇಜನ ಸಿಗುವ ಅಪಾಯವಿದೆ ಎಂದೂ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

ಇರಾನ್ ಯುದ್ಧದಲ್ಲಿ ಅನಿರೀಕ್ಷಿತ ಗೆಲುವು ಕಂಡ ಕ್ಯಾಲಿಫೋರ್ನಿಯಾದ ಪಿಸ್ತಾಶಿಯೊ ಕಿಂಗ್ಸ್! (ಜಾಗತಿಕ ಜಗಲಿ)

ರಾಮ ಮಂದಿರ ದೇಣಿಗೆ ವಿವಾದ: ಅಂಬಾನಿ ನೀಡಿದ ದೇಣಿಗೆ ಹಣ ಎಲ್ಲಿ..? ಗಜ್ನಿ ನಂತರ ದೇವಾಲಯ ಲೂಟಿ ಮಾಡಿದ್ದು BJP-RSS; ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ. ಶಿವಕುಮಾರ್

ಕ್ಷಮಾಪಣೆ ಕೇಳಿ ಜೈಲಿಂದ ಹೊರಬಂದ ಸಾವರ್ಕರ್, ಹಿಂಬಾಲಕರು ದೇಶ ಉಳಿಸ್ತಾರ? ಮಾಜಿ ಸಿಎಂ ಸಿದ್ದರಾಮಯ್ಯ