ಬೆಂಗಳೂರು: ಡಿಕೆ ಶಿವಕುಮಾರ್ ಅವರೇ ನೀವು ಕಾಂಗ್ರೆಸ್ ಪ್ರತಿನಿಧಿಸುವ ಕ್ಷೇತ್ರಗಳಿಗೆ ಮಾತ್ರ ಮುಖ್ಯಮಂತ್ರಿನಾ? ಬೆಂಗಳೂರಿನ ಮೂಲಸೌಕರ್ಯ ಮತ್ತು ರಸ್ತೆ ಅಭಿವೃದ್ಧಿಗೆ 2,000 ಕೋಟಿ ರೂ. ಪ್ಯಾಕೇಜ್ನಲ್ಲಿ 'ತಾರತಮ್ಯ ಹಂಚಿಕೆ' ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.
ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ವಾಸಿಸುವ ಲಕ್ಷಾಂತರ ಬೆಂಗಳೂರು ನಿವಾಸಿಗಳು ತೆರಿಗೆ ಪಾವತಿಸುತ್ತಾರೆ. ಆದರೆ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಪ್ಯಾಕೇಜ್ ನಲ್ಲಿ ತಾರತಮ್ಮ ಮಾಡಲಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರೋಪಿಸಿದ್ದಾರೆ. ಒಂದೆಡೆ, ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ನೂರಾರು ಕೋಟಿ ರೂಪಾಯಿಗಳ ನಿಧಿ ಬಂದಿದೆ. ಆದರೆ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ತಲಾ 40 ಕೋಟಿ ಮಾತ್ರ ನೀಡಲಾಗಿದ್ದು 16 ಕ್ಷೇತ್ರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದರು.
ವರದಿಗಳ ಪ್ರಕಾರ, ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಾದ ಚಾಮರಾಜಪೇಟೆ, ಗಾಂಧಿ ನಗರ, ವಿಜಯನಗರ, ಶಾಂತಿನಗರ, ಹೆಬ್ಬಾಳ, ಗೋವಿಂದರಾಜನಗರ, ಪುಲಕೇಶಿನಗರ, ಶಿವಾಜಿನಗರ, ಬಿಟಿಎಂ ಲೇಔಟ್, ಸರ್ವಜ್ಞನಗರ ಮತ್ತು ಬ್ಯಾಟರಾಯನಪುರಕ್ಕೆ ತಲಾ 100 ಕೋಟಿ ರೂ. ಹಂಚಿಕೆಯಾಗಿದೆ. ಆದರೆ ಬಿಜೆಪಿ ಪ್ರತಿನಿಧಿಸುವ ಕ್ಷೇತ್ರಗಳಿಗೆ ಹಂಚಿಕೆ 40 ಕೋಟಿ ರೂ.ಗಳಿಂದ 80 ಕೋಟಿ ರೂ.ಗಳವರೆಗೆ ಇದೆ.
ಶಿವಕುಮಾರ್ ಮತ್ತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಉದ್ದೇಶಿಸಿ ಮಾತನಾಡಿದ ಅಶೋಕ, "ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ವಾಸಿಸುವ ಲಕ್ಷಾಂತರ ಬೆಂಗಳೂರು ನಿವಾಸಿಗಳು ತೆರಿಗೆ ಪಾವತಿಸುವುದಿಲ್ಲವೇ? ಅವರು ಉತ್ತಮ ರಸ್ತೆಗಳು ಮತ್ತು ಮೂಲಸೌಕರ್ಯಕ್ಕೆ ಅರ್ಹರಲ್ಲವೇ? ನಿಮ್ಮ ರಾಜಕೀಯ ಪ್ರೇರಿತ ಮತ್ತು ಸೇಡಿನ ನಿರ್ಧಾರವು ಬೆಂಗಳೂರಿನ ಒಟ್ಟಾರೆ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಬೆಂಗಳೂರಿನ ಜನರು ಈ ತಾರತಮ್ಯದ ಆಡಳಿತ ಮತ್ತು ಸೇಡಿನ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯಲ್ಲಿ, ರಾಜಧಾನಿಯ ಜನರು ಈ ತಾರತಮ್ಯದ ನೀತಿ ಮತ್ತು ಪಕ್ಷಪಾತದ ನಡವಳಿಕೆಗೆ ಖಂಡಿತವಾಗಿಯೂ ಸೂಕ್ತ ಪಾಠ ಕಲಿಸುತ್ತಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.