ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಜೂನ್ 30ರಿಂದ ಜುಲೈ 6ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.
ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಹಲವೆಡೆ ವಾಹನ ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ.
ಐಎಂಡಿ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾರ್ವಜನಿಕರು ಅಗತ್ಯವಿಲ್ಲದೆ ಮನೆಯಿಂದ ಹೊರಬರದಂತೆ ಮನವಿ ಮಾಡಿದೆ. ವಿಶೇಷವಾಗಿ ಮಕ್ಕಳು, ಕಾರ್ಮಿಕರು ಹಾಗೂ ಹೊರಾಂಗಣದಲ್ಲಿ ಕೆಲಸ ಮಾಡುವವರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ.
ಗುಡುಗು-ಮಿಂಚು ಹಾಗೂ ಭಾರೀ ಮಳೆಯ ಸಮಯದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸಲಹೆ ನೀಡಲಾಗಿದೆ.
ಅಲ್ಲದೆ, ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ನದಿಗಳು, ಕೆರೆಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ನಿರಂತರ ಮಳೆಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯವೂ ಹೆಚ್ಚಿರುವುದರಿಂದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.