ಬೆಂಗಳೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದು, ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಸಿಲುಕಿರುವ ಕನ್ನಡಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ, ಸಿದ್ದರಾಮಯ್ಯ ಅವರು, ಮಧ್ಯ ಪ್ರಾಚ್ಯದಲ್ಲಿ ಅತೀ ವೇಗವಾಗಿ ಹೆಚ್ಚುತ್ತಿರುವ ಉದ್ವಿಗ್ನತೆಯಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅನೇಕ ದೇಶಗಳು ವಾಯುಪ್ರದೇಶದಲ್ಲಿ ನಿರ್ಬಂಧಗಳನ್ನು ಘೋಷಿಸಿವೆ. ಇದು ಹಲವು ವಿಮಾನಗಳ ರದ್ದತಿಗೆ ಮತ್ತು ಅಂತರರಾಷ್ಟ್ರೀಯ ವಿಮಾನ ಕಾರ್ಯಾಚರಣೆಗೆ ಅಡ್ಡಿ ಉಂಟುಮಾಡಿದೆ ಎಂದು ಹೇಳಿದ್ದಾರೆ.
ಯುಎಇ, ಕತಾರ್ ಹಾಗೂ ಬಹ್ರೇನ್ ಸೇರಿದಂತೆ ವಿವಿಧ ಪಶ್ಚಿಮ ಏಷ್ಯಾ ದೇಶಗಳಲ್ಲಿ ಸಾವಿರಾರು ಸಂಖ್ಯೆಯ ಭಾರತೀಯರು ಅತಂತ್ರರಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ರಾಜತಾಂತ್ರಿಕ ಸಂಪರ್ಕಗಳನ್ನು ಬಲಪಡಿಸಬೇಕು ಮತ್ತು ಅಲ್ಲಿನ ರಾಯಭಾರ ಕಚೇರಿಗಳ ಮೂಲಕ ನಿರಂತರ ನಿಗಾ ವಹಿಸಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.
ಪರಿಸ್ಥಿತಿ ಕೈಮೀರಿದರೆ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ, ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ರಾಯಭಾರ ಕಚೇರಿಗಳು ಮತ್ತು ವಿಮಾನಯಾನ ಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಿ, ಸಂಕಷ್ಟದಲ್ಲಿರುವವರಿಗೆ ತಕ್ಷಣದ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಲು ರಾಜತಾಂತ್ರಿಕ ಸಂಪರ್ಕಗಳನ್ನು ಬಲಪಡಿಸಬೇಕು. ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ವಿಮಾನಯಾನ ಸಂಸ್ಥೆಗಳ ನಡುವೆ ಸಂವಹನ ಸುಗಮಗೊಳಿಸಲು ಅಂತರ್-ಸಚಿವಾಲಯ ಕಾರ್ಯಪಡೆಯನ್ನು ಸ್ಥಾಪಿಸಲು ಸಿಎಂ ಸಲಹೆ ನೀಡಿದ್ದಾರೆ.
ಕನ್ನಡಿಗರು ಮತ್ತು ಇತರ ಭಾರತೀಯರ ಟ್ರ್ಯಾಕಿಂಗ್ ಹಾಗೂ ಸಲಹೆಗಳನ್ನು ನೀಡಲು ಕೇಂದ್ರೀಕೃತ ಡಿಜಿಟಲ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ಕೋರಿದ್ದಾರೆ. ಪರಿಸ್ಥಿತಿ ಬಿಗಡಾಯಿಸಿದರೆ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿದ್ದಲ್ಲಿ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.
ರಾಜ್ಯ ಸರ್ಕಾರದಿಂದ ಸಹಕಾರ
ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಪ್ರಕ್ರಿಯೆಯಲ್ಲಿ ಕರ್ನಾಟಕ ಸರ್ಕಾರವು ಕೇಂದ್ರದೊಂದಿಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಉದ್ಯೋಗ ಮತ್ತು ವ್ಯಾಪಾರಕ್ಕಾಗಿ ಲಕ್ಷಾಂತರ ಕನ್ನಡಿಗರು ಮಧ್ಯಪ್ರಾಚ್ಯದ ವಿವಿಧ ದೇಶಗಳಲ್ಲಿ ನೆಲೆಸಿದ್ದಾರೆ. ಇತ್ತೀಚಿನ ಯುದ್ಧದ ಪರಿಸ್ಥಿತಿಯಿಂದಾಗಿ ಅವರ ಕುಟುಂಬದವರು ಆತಂಕದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಈ ಪತ್ರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಮಹತ್ವದ ನಡೆಯಾಗಿದೆ.