ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2026–27ನೇ ಸಾಲಿನ ರಾಜ್ಯ ಬಜೆಟ್ ನ್ನು ಮಂಡಿಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಲವು ಹೊಸ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಈ ಬಜೆಟ್ನಲ್ಲಿ ಘೋಷಿಸಲಾಗಿದೆ.
ಬಜೆಟ್ ಭಾಷಣದಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಮೇಲಿನ ಜಾತಿ ಆಧಾರಿತ ದೌರ್ಜನ್ಯವನ್ನು ತಡೆಯಲು Rohith Vemula Act ಜಾರಿಗೆ ತರಲಾಗುತ್ತದೆ ಎಂದು ಘೋಷಿಸಿದರು. ಈ ಕಾಯ್ದೆಗೆ ರೋಹಿತ್ ವೇಮುಲ ಅವರ ಹೆಸರನ್ನು ನೀಡಲಾಗಿದೆ ಎಂದು ಘೋಷಿಸಿದರು.
ಆರೋಗ್ಯ ಕ್ಷೇತ್ರದಲ್ಲಿ, ಕಾರವಾರದಲಿ 198 ಕೋಟಿ ವೆಚ್ಚದಲ್ಲಿ 450 ಹಾಸಿಗೆಗಳ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುತ್ತದೆ. ಜೊತೆಗೆ ರಾಯಚೂರಿನಲ್ಲಿ 10 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗುತ್ತದೆ. ಇದೇ ವೇಳೆ 92 ಕೋಟಿ ವೆಚ್ಚದಲ್ಲಿ ಮೈಸೂರು ಮತ್ತು ತುಮಕೂರುಗಳಲ್ಲಿ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸಲಾಗುತ್ತದೆ.
ಗ್ರಾಮ ಪಂಚಾಯಿತಿಗಳಿಗೆ “ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿಗಳು” ಮರು ನಾಮಕರಣ
ಹಜ್ ಯಾತ್ರಿಕರ ಸೌಲಭ್ಯಕ್ಕಾಗಿ ಹುಬ್ಬಳ್ಳಿ ಮತ್ತು ಕಲಬುರಗಿಗಳಲ್ಲಿ ಹಜ್ ಭವನಗಳನ್ನು ನಿರ್ಮಿಸಲಾಗುತ್ತದೆ. ಹೆಚ್ಚಿನ ವಾಣಿಜ್ಯ ಬೇಡಿಕೆಯಿರುವ ಪ್ರದೇಶಗಳಲ್ಲಿ ಇರುವ ವಕ್ಫ್ ಆಸ್ತಿಗಳನ್ನು ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್ಶಿಪ್ (PPP) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ “ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿಗಳು” ಎಂದು ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುತ್ತಿರುವ ಸಂಚಾರವನ್ನು ಕಡಿಮೆ ಮಾಡಲು ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಇದಕ್ಕಾಗಿ ಭಾರತೀಯ ವಿಮಾನ ನಿಲ್ಧಾಣ ಪ್ರಾಧಿಕಾರ ತಾಂತ್ರಿಕ ಸಲಹೆ ಪಡೆದು ಸಾಧ್ಯತಾ ವರದಿ ಸಿದ್ಧಪಡಿಸಲಾಗುತ್ತದೆ.
ರಾಜ್ಯದ ಏಳು ದೇಶೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಈಗಾಗಲೇ 1,593 ಕೋಟಿ ಬಿಡುಗಡೆ ಮಾಡಲಾಗಿದೆ. ಈ ವರ್ಷಕ್ಕೆ 200 ಕೋಟಿ ಮೀಸಲಿಡಲಾಗಿದೆ. ವಿಜಯಪುರ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ತರಬೇತಿ ಶಾಲೆ ಆರಂಭಿಸಲಾಗುತ್ತದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪಿಪಿಪಿ ಮಾದರಿಯಲ್ಲಿ ವಿಮಾನ ತಯಾರಿಕೆ ಮತ್ತು ಅಸೆಂಬ್ಲಿ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ.
ತದಡಿಯಲ್ಲಿ ಪರಿಸರ ಸ್ನೇಹಿ ವಸತಿ ವ್ಯವಸ್ಥೆಗಳು, ವಾಕಿಂಗ್ ಕಾರಿಡಾರ್ಗಳು, ಪ್ರವಾಸಿ ಮಾಹಿತಿ ಕೇಂದ್ರಗಳು ಸೇರಿದಂತೆ ಮೂಲಸೌಕರ್ಯವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.
ರೈಲ್ವೆ ಸಚಿವಾಲಯದೊಂದಿಗೆ 50:50 ವೆಚ್ಚ ಹಂಚಿಕೆ ಆಧಾರದಲ್ಲಿ ಒಂಬತ್ತು ರೈಲು ಮಾರ್ಗ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇದುವರೆಗೆ ಭೂಸ್ವಾಧೀನಕ್ಕೆ 2,950 ಕೋಟಿ ರೂಪಾಯಿ ಹಾಗೂ ನಿರ್ಮಾಣಕ್ಕೆ 2,682 ಕೋಟಿ ರೂ ವೆಚ್ಚವಾಗಿದೆ. 2026–27ನೇ ಬಜೆಟ್ನಲ್ಲಿ ಈ ಯೋಜನೆಗಳಿಗೆ 600 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಬೆಂಗಳೂರು ಮೂಲಭೂತಸೌಕರ್ಯ
ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಮುಖ್ಯಮಂತ್ರಿ, Outer Ring Road ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷ ನ್ ನಿಂದ ಕೃಷ್ವಣರಾಜಪುರ ಮೆಟ್ರೊ ನಿಲ್ದಾಣದವರೆಗೆ ಇರುವ ಭಾಗವನ್ನು 450 ಕೋಟಿ ರೂಪಾಯಿ ವೆಚ್ಚದಲ್ಲಿ ಜಾಗತಿಕ ಮಟ್ಟದ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಘೋಷಿಸಿದರು.
ಇದರ ಜೊತೆಗೆ ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ 1,255 ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ನಗರದ ರಸ್ತೆಗಳ ದೀರ್ಘಾಯುಷ್ಯ ಮತ್ತು ಸಂಚಾರ ಸುಗಮತೆಗೆ 158 ಕಿಮೀ ರಸ್ತೆಗಳಿಗೆ 1,700 ಕೋಟಿ ರೂಪಾಯಿ ವೆಚ್ಚದಲ್ಲಿ ವೈಟ್ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗಿದೆ.
ಗ್ರಾಮೀಣ ಉದ್ಯೋಗ ಕ್ಷೇತ್ರದಲ್ಲಿ ನರೇಗಾ ಅಡಿಯಲ್ಲಿ ಸುಮಾರು 182 ಕೋಟಿ ಮಾನವ-ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, 61,000 ಕೋಟಿ ರೂಪಾಯಿ ವೇತನ ಪಾವತಿ ಮಾಡಲಾಗಿದೆ. ಇದರಿಂದ ಸುಮಾರು 77 ಲಕ್ಷ ಗ್ರಾಮೀಣ ಕುಟುಂಬಗಳಿಗೆ ಲಾಭವಾಗಿದೆ.
ಇದೇ ವೇಳೆ ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಘೋಷಿಸಿದರು.
ನಮ್ಮ ಮೆಟ್ರೊ ಯೋಜನೆ ಕುರಿತು ಮಾತನಾಡಿದ ಅವರು, ಇದುವರೆಗೆ ಒಟ್ಟು ₹67,460 ಕೋಟಿ ವೆಚ್ಚವಾಗಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾಲು ₹59,376 ಕೋಟಿ (88%) ಆಗಿದ್ದು, ಕೇಂದ್ರ ಸರ್ಕಾರದ ಪಾಲು ₹8,084 ಕೋಟಿ (12%) ಎಂದು ತಿಳಿಸಿದ್ದಾರೆ.