ಬೆಂಗಳೂರು: ಪ್ರೇಯಸಿಯನ್ನು ಕೊಲೆ ಮಾಡಿ ಬಳಿಕ ಶವವನ್ನು ಸುಟ್ಟು ಸಾಕ್ಷ್ಯ ನಾಶ ಮಾಡಲು ವ್ಯಕ್ತಿಯೊಬ್ಬ ಯತ್ನಿಸಿರುವ ಘಟನೆಯೊಂದು ನಗರದ ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ.
ಆರೋಪಿಯನ್ನು ಮೌನೇಶ್ ಮೈತ್ರಿ (34) ಎಂದು ಗುರುತಿಸಲಾಗಿದೆ. ಈತ ಮೂಲತಃ ಯಾದಗಿರಿ ಜಿಲ್ಲೆಯ ಹಸನಾಪುರ ನಿವಾಸಿಯಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ.
ಇನ್ನು ಹತ್ಯೆಯಾದ ಮಹಿಳೆಯನ್ನು ನಿರ್ಮಲಾ (36) ಎಂದು ಗುರುತಿಸಲಾಗಿದ್ದು, ಇವಕು ಚಿಕ್ಕಬಳ್ಳಾಪುರ ಜಿಲ್ಲೆಯ ನೀಲುಗುಂಭ ಗ್ರಾಮದವರು ಎನ್ನಲಾಗುತ್ತಿದೆ.
ಆರೋಪಿಯ ಪತ್ನಿ ಹೆರಿಗೆಗಾಗಿ ತನ್ನ ಊರಿಗೆ ತೆರಳಿದ್ದ ಸಮಯದಲ್ಲಿ ಮೌನೇಶ್ ಮತ್ತು ನಿರ್ಮಲಾ ನಡುವೆ ಅನೈತಿಕ ಸಂಬಂಧ ಬೆಳೆದಿದೆ. ಈ ಸಂಬಂಧ ಬಹಿರಂಗವಾಗುವ ಭಯದಿಂದ ಫೆಬ್ರವರಿ 21ರಂದು ದೇವನಹಳ್ಳಿಯ ಬಾಡಿಗೆ ಮನೆಯಲ್ಲಿ ಮೌನೇಶ್ ನಿರ್ಮಲಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಕೊಲೆ ನಂತರ ಎರಡು ದಿನಗಳ ಕಾಲ ಶವವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪಿ, ಬಳಿಕ ಮೃತದೇಹವನ್ನು ಚೀಲದಲ್ಲಿ ಸುತ್ತಿ ಬೈಕ್ನಲ್ಲಿ ಹೊತ್ತುಕೊಂಡು ದೇವನಹಳ್ಳಿಯಲ್ಲಿನ ಕಾಲುವೆ ಬಳಿ ತೆಗೆದುಕೊಂಡು ಹೋಗಿದ್ದಾನೆ. ಅಲ್ಲಿ ಪೆಟ್ರೋಲ್ ಸುರಿದು ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 25ರಂದು ಸುಟ್ಟ ಸ್ಥಿತಿಯಲ್ಲಿದ್ದ ಶವದ ಅವಶೇಷಗಳು ಪತ್ತೆಯಾಗುತ್ತಿದ್ದಂತೆ ಪೊಲಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಸಿಸಿಟಿವಿ ದೃಶ್ಯಗಳು ಮತ್ತು ತಾಂತ್ರಿಕ ಮಾಹಿತಿ ಆಧರಿಸಿ ಮೃತಳನ್ನು ಗುರ್ತಿಸಿದ್ದು, ಬಳಿಕ ಫೆಬ್ರವರಿ 27ರಂದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮಾರ್ಚ್ 3ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.