ಬೆಂಗಳೂರು: ಹಾಸನ ಜಿಲ್ಲೆಯ ಕೌಶಿಕ ಗ್ರಾಮದ ಅಂತರ್ಜಲ ಕೈಗಾರಿಕಾ ತ್ಯಾಜ್ಯದಿಂದ ಕಲುಷಿತವಾಗಿದ್ದರೆ, ಕೇಂದ್ರದಿಂದ ತಂಡ ಕಳಿಸಿ ಮತ್ತೊಮ್ಮೆ ಪರಿಶೀಲನೆ ನಡೆಸಿ, ನ್ಯೂನತೆ ಇದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿಗಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಸೂರಜ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಿಕ ಗ್ರಾಮಸ್ಥರಿಂದ ಕೊಳವೆ ಬಾವಿಗಳಿಗೆ ಕೈಗಾರಿಕಾ ತ್ಯಾಜ್ಯ ಬಿಡುತ್ತಿರುವ ಬಗ್ಗೆ ದೂರು ಸ್ವೀಕೃತವಾಗಿಲ್ಲ ಎಂದರು.
ಕೌಶಿಕ ಗ್ರಾಮದಿಂದ 2 ಕಿ.ಮೀ. ದೂರದಲ್ಲಿರುವ ಕೆ.ಐ.ಎ.ಡಿ.ಬಿ. ಕೈಗಾರಿಕಾ ಪ್ರದೇಶದಲ್ಲಿ ಕೆಲವು ಕೈಗಾರಿಕೆಗಳು ಮಂಡಳಿಯಿಂದ ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುತ್ತಿವೆ. ಆದಾಗ್ಯೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಾಸನ ಪ್ರಾದೇಶಿಕ ಅಧಿಕಾರಿಗಳು ಗ್ರಾಮದ ಸುತ್ತಮುತ್ತಲಿನ ಕೊಳವೆ ಬಾವಿಗಳಿಂದ ನೀರಿನ ಮಾದರಿ ಸಂಗ್ರಹಿಸಿ ವಿಶ್ಲೇಷಣೆ ಮಾಡಲಾಗಿದ್ದು, ವರದಿ ಪ್ರಕಾರ ಕೊಳವೆ ಬಾವಿಗಳ ನೀರು ಕಲುಷಿತವಾಗಿರುವುದಿಲ್ಲ ಮತ್ತು ಕುಡಿಯುವ ನೀರಿನ ಗುಣಮಟ್ಟಕ್ಕೆ ಅನುಮತಿಸಿದ ಮಿತಿಯೊಳಗಿದೆ ಎಂದು ತಿಳಿಸಿದರು.
ನೀರಿನ ಪರೀಕ್ಷೆಗೆ ಖಂಡ್ರೆ ಸೂಚನೆ: ಸೂರಜ್ ರೇವಣ್ಣ ಅವರು ಬಾಟಲಿಯಲ್ಲಿ ತಂದಿದ್ದ ನೀರನ್ನು ಸದನದಲ್ಲಿ ಪ್ರದರ್ಶಿಸಿದರು. ನಂತರ ಆ ನೀರಿನ ಬಾಟಲಿಯನ್ನು ಪಡೆದುಕೊಂಡ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ನೀರಿನ ಗುಣಮಟ್ಟ ಪರೀಕ್ಷಿಸಿ 3 ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚನೆ ನೀಡಿದರು.