ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಖಂಡ್ರೆ, ವನ್ಯಜೀವಿಗಳ ಸರಣಿ ದಾಳಿಯ ನಂತರ ಮಾನವ ಜೀವಗಳನ್ನು ರಕ್ಷಿಸಲು ಈ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.
ಸಫಾರಿಗಳ ಅಮಾನತುಗೊಳಿಸುವಿಕೆಯಿಂದ 4,000ಕ್ಕೂ ಹೆಚ್ಚು ಜನ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ದೇಶಾದ್ಯಂತ ಸಫಾರಿಗಳು ನಡೆಯುತ್ತಿವೆ ಮತ್ತು ಯಾವುದೇ ಸಮೀಕ್ಷೆ ನಡೆಸದೆ ಸಫಾರಿಗಳನ್ನು ಇದ್ದಕ್ಕಿದ್ದಂತೆ ನಿಲ್ಲಿಸುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವರು, ಸಫಾರಿಗಳನ್ನು ಇದ್ದಕ್ಕಿದ್ದಂತೆ ನಿಲ್ಲಿಸಲಾಗಿಲ್ಲ. ಕಳೆದ ನವೆಂಬರ್ನಲ್ಲಿ 15 ದಿನಗಳ ಅವಧಿಯಲ್ಲಿ ಮೂರು ಅಮೂಲ್ಯ ಜೀವಗಳು ಬಲಿಯಾಗಿವೆ. ಒಬ್ಬರು ಶಾಶ್ವತವಾಗಿ ಅಂಗವಿಕಲವಾಗಿದ್ದಾರೆ. ಹುಲಿಗಳು ಕಾಡಿನಿಂದ ಹೊರಬಂದು ದಾಳಿ ಮಾಡುತ್ತಿವೆ. ಜನರ ಅಮೂಲ್ಯ ಜೀವಗಳನ್ನು ರಕ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ನವೆಂಬರ್ನಲ್ಲಿ ಚಾಮರಾಜನಗರದಲ್ಲಿ ಈ ನಿಟ್ಟಿನಲ್ಲಿ ಸಭೆ ನಡೆಸಿದಾಗ, ಅನೇಕ ರೈತ ಸಂಘಟನೆಗಳು ರಾತ್ರಿಯವರೆಗೆ ಸಫಾರಿ ನಡೆಸಲಾಗುತ್ತಿದೆ ಎಂದು ಹೇಳಿದ್ದರು. ವಾಹನ ದಟ್ಟಣೆ ಹೆಚ್ಚಿದೆ. ಹೆಚ್ಚಿನ ಪ್ರವಾಸಿಗರು ಬರುತ್ತಿದ್ದಾರೆ. ಇದರಿಂದ ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿವೆ. ಹೀಗಾಗಿ ಸಫಾರಿ ನಿಲ್ಲಿಸಬೇಕೆಂದು ಒತ್ತಾಯಿಸಿದ್ದರು ಎಂದರು.
ಈ ಮಧ್ಯೆ, ತಾವು ಬೀದರ್ನಲ್ಲಿದ್ದಾಗ, ಒಂದು ವಾರದಲ್ಲೇ ಮತ್ತೊಂದು ಹುಲಿ ದಾಳಿಯಿಂದ ಒಬ್ಬ ವ್ಯಕ್ತಿ ಮೃತಪಟ್ಟ ನಂತರ, ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು ಮತ್ತು ಕಾಡಿನ ಅಂಚಿನಲ್ಲಿರುವ ಹಳ್ಳಿಯಲ್ಲಿ ಕಾವಲು ಕಾಯಲು ಸಿಬ್ಬಂದಿ ಹಾಗೂ ವಾಹನವನ್ನು ಬಳಸಲಾಗಿದೆ ಎಂದು ಸಚಿವರು ಹೇಳಿದರು.
ಇದಲ್ಲದೆ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಯಿತು. ಕೇಂದ್ರ ವನ್ಯಜೀವಿ ಸಂಸ್ಥೆಯ ಪ್ರತಿನಿಧಿಯನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಯಿತು ಮತ್ತು ಆ ತಜ್ಞರ ಸಮಿತಿಯ ಪ್ರಾಥಮಿಕ ವರದಿಯ ಆಧಾರದ ಮೇಲೆ ಸಫಾರಿಯನ್ನು ಪುನರಾರಂಭಿಸಲಾಗಿದೆ ಎಂದು ಸಚಿವರು ವಿವರಿಸಿದರು.