ಬೆಂಗಳೂರು: ಮನೆಯೊಂದರಲ್ಲಿ 14 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಅಭರಣ ದೋಚಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಈತನ ಬಂಧನದೊಂದಿಗೆ 14 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 24 ರಂದು ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿತ್ತು.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಅತ್ತೆಯ ಮನೆಯ ಕಬೋರ್ಡ್ನಲ್ಲಿ ಇರಿಸಲಾಗಿದ್ದ ವಜ್ರ ಮತ್ತು ಚಿನ್ನಾಭರಣಗಳು ಕಾಣೆಯಾಗಿವೆ ಎಂದು ದೂರು ದಾಖಲಾಗಿತ್ತು. ಸುಮಾರು 10 ವರ್ಷಗಳಿಂದ ಚಾಲಕನಾಗಿ ದುಡಿದು ಎರಡು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ ವ್ಯಕ್ತಿಯ ಮೇಲೆ ದೂರುದಾರರು ಅನುಮಾನ ವ್ಯಕ್ತಪಡಿಸಿದ್ದರು.
ತದನಂತರ ಜಕ್ಕೂರು ಸರ್ಕಾರಿ ಶಾಲೆಯ ಬಳಿ ಹಿಂದಿನ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತನ್ನ ಸ್ನೇಹಿತನೊಂದಿಗೆ ಸೇರಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕದ್ದ ವಜ್ರ ಮತ್ತು ಚಿನ್ನಾಭರಣಗಳನ್ನು ಆಭರಣ ಮಳಿಗೆಗೆ ಮಾರಾಟ ಮಾಡಿರುವುದನ್ನು ಆರೋಪಿ ಬಹಿರಂಗಪಡಿಸಿದ್ದಾರೆ. ಆರೋಪಿಯ ಸ್ನೇಹಿತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.