ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸರ್ಕಾರ ಮಾಹಿತಿ ನೀಡಿದ್ದು, ಈ ಅಂಕಿಅಂಶಗಳು ಕಳವಳವನ್ನುಂಟು ಮಾಡಿದೆ.
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಎಂಎಲ್ಸಿ ತಿಪ್ಪಣ್ಣ ಕಾಮಕ್ನೂರ್ ಕೇಳಿದ ಪ್ರಶ್ನೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉತ್ತರಿಸಿದರು.
ಏಳನೇ ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ತಿಪ್ಪಣ್ಣ ಅವರು ಆತಂಕ ವ್ಯಕ್ತಪಡಿಸಿದ್ದು, ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದರು.
ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಾಗ ಅದು ಕೇವಲ ಒಂದು ಜೀವದ ಅಂತ್ಯವಲ್ಲ; ಒಂದು ಕುಟುಂಬದ ಕನಸಿನ ಅಂತ್ಯವೂ ಆಗುತ್ತದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಸಚಿವ ಮಹದೇವಪ್ಪ ಅವರು, ರಾಜ್ಯದಲ್ಲಿ ಆತ್ಮಹತ್ಯೆ ತಡೆಗಟ್ಟುವ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ಆತ್ಮಹತ್ಯೆ ತಡೆಗಟ್ಟುವ ನೀತಿ–2025 ಅಂತಿಮ ಹಂತದಲ್ಲಿದ್ದು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ ಈ ನೀತಿಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.