ಚಿಕ್ಕಮಗಳೂರು: ಪ್ರಸಿದ್ಧ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಉಂಟಾದ ಕಾಡ್ಗಿಚ್ಚು ಎದುರಾಗಿದ್ದು, ಪರಿಣಾಮ 18 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಕೆರೇಕಟ್ಟೆ ಅರಣ್ಯ ವಲಯದ ಮಾಣಿಕ್ಯ ಬೆಟ್ಟ ಹಾಗೂ ವಾಲಿಕುಂಜ ಗಿರಿ ಪ್ರದೇಶಗಳಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ವೇಗವಾಗಿ ಪಕ್ಕದ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಸುಮಾರು 18 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಶೋಲಾ ಅರಣ್ಯದ ಹುಲ್ಲುಗಾವಲು ಪ್ರದೇಶಗಳಲ್ಲಿ ಕೆಲ ದುಷ್ಕರ್ಮಿಗಳು 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಯ ಜ್ವಾಲೆಗಳು ದೂರದೂರಿನಿಂದಲೂ ಗೋಚರಿಸುತ್ತಿತ್ತು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಕಿ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿರುವುದು ಮತ್ತು ಅರಣ್ಯವನ್ನು ರಕ್ಷಿಸುವಲ್ಲಿ ವಿಫಲವಾಗಿರುವುದಾಗಿ ಆರೋಪಿಸಿದ್ದಾರೆ.
ಅಗ್ನಿ ನಿಯಂತ್ರಣಕ್ಕೆ ಸಿಬ್ಬಂದಿಯನ್ನು ನೇಮಿಸಲು ಹಣ ವೆಚ್ಚ ಮಾಡಲಾಗುತ್ತಿದೆಯಾದರೂ, ಸಿಬ್ಬಂದಿಗಳು ಸ್ಥಳದಲ್ಲೇ ಕಾರ್ಯನಿರ್ವಹಿಸದಿರುವುದು ಸ್ಪಷ್ಟವಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.