ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನಲ್ಲಿ ಅಕಾಲಿಕ ಮಳೆ ಅಬ್ಬರದಿಂದ ಮಾವು ಬೆಳೆ ಭಾರೀ ಹಾನಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಕ್ಷಣ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆ ಮತ್ತು ಗಾಳಿಯಿಂದಾಗಿ ಮಾವಿನ ತೋಟಗಳಲ್ಲಿ ಹೂವುಗಳು, ಮೊಗ್ಗುಗಳು ಮತ್ತು ಬೆಳೆಯುತ್ತಿರುವ ಕಾಯಿ ಉದುರಿ ಹೋಗಿದ್ದು, ಇದು ರೈತರ ಭಾರೀ ಹೊಡೆತ ನೀಡಿದೆ.
ಹಲವು ಗ್ರಾಮಗಳಲ್ಲಿ ಮರಗಳಿಂದ ಹೂವುಗಳು ಸಂಪೂರ್ಣವಾಗಿ ಉದುರಿರುವುದು ಕಂಡುಬಂದಿದ್ದು, ಇದರಿಂದ ಈ ವರ್ಷದ ಉತ್ಪಾದನೆ ತೀವ್ರವಾಗಿ ಕುಸಿಯುವ ಭೀತಿ ಎದುರಾಗಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯೆ ನೀಡಿರುವ ಪ್ರಹ್ಲಾದ್ ಜೋಶಿಯವರು ಹವಾಮಾನ ಬದಲಾವಣೆ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ಈಗಾಗಲೇ ಹೂವು ಉದುರುವಿಕೆ ಹೆಚ್ಚಳ, ಮೊಗ್ಗುಗಳಿಗೆ ಕೀಟಬಾಧೆ, ಹಣ್ಣು ಕೊಳೆಯುವ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಬೆಳೆ ಸಂಪೂರ್ಣವಾಗಿ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ಇದರಿಂದ ರೈತರ ಆದಾಯಕ್ಕೆ ಭಾರೀ ಹೊಡೆತ ಬೀಳಲಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಕ್ಷಣ ಪ್ರತಿಯೊಬ್ಬ ರೈತನ ಜಮೀನಿಗೆ ಭೇಟಿ ನೀಡಿ, ಬೆಳೆ ಹಾನಿಯ ಸಂಪೂರ್ಣ ವಿವರ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಸಮೀಕ್ಷೆ ಪ್ರಕ್ರಿಯೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಇದೇ ವೇಳೆ ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟಕ್ಕೆ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಮೂಲಕ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ರೈತರು ಯಾವುದೇ ಆತಂಕಪಡಬಾರದು, ಸರ್ಕಾರ ಅವರ ಜೊತೆಯಿದೆ ಎಂದು ಭರವಸೆ ನೀಡಿದ್ದಾರೆ.
ಜಿಲ್ಲಾಡಳಿತ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ ರೈತರಿಗೆ ಅಗತ್ಯ ಮಾರ್ಗದರ್ಶನ ಹಾಗೂ ನೆರವು ನೀಡಬೇಕು. ಸಂಕಷ್ಟದಲ್ಲಿರುವ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.