ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಶನಿವಾರ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಬೆಂಗಳೂರು ಸಜ್ಜಾಗಿದ್ದು, ಪಂದ್ಯ ನಡೆಯುವ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲೂ ಪೊಲೀಸರು ಬಿಗಿ ಭದ್ರತೆ ನಿಯೋಜನೆಗೊಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸ್, ಗೃಹ ರಕ್ಷಕ ದಳ ಹಾಗೂ ನಾಗರಿಕ ರಕ್ಷಣಾ ಸಿಬ್ಬಂದಿ ಸೇರಿ ದೊಡ್ಡ ಪ್ರಮಾಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದ್ದು, ಈ ಬಾರಿ 22ರಿಂದ ಸುಮಾರು 45 ದ್ವಾರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.
ಇದಲ್ಲದೆ, ಆಂಬ್ಯುಲೆನ್ಸ್ಗಳು, ವೈದ್ಯಕೀಯ ತುರ್ತು ಸೇವಾ ಕೇಂದ್ರಗಳು (ಟ್ರಿಯಾಜ್), ಅಗ್ನಿಶಾಮಕ ವಾಹನಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಟಿಕೆಟ್ ಇಲ್ಲದೆ ಸ್ಟೇಡಿಯಂ ಸುತ್ತಮುತ್ತ ಗುಂಪುಗೂಡುವುದನ್ನು ತಡೆಯಲು ಪೊಲೀಸ್ ಹಾಗೂ ಸಿವಿಲ್ ಡಿಫೆನ್ಸ್ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಪ್ರೇಕ್ಷಕರು ಟಿಕೆಟ್ನಲ್ಲಿ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸ್ಟೇಡಿಯಂ ಸುತ್ತಲಿನ ನಾಲ್ಕು ಪ್ರಮುಖ ರಸ್ತೆಗಳಲ್ಲಿ ನಿಲ್ಲಲು ಅವಕಾಶ ಇರುವುದಿಲ್ಲ. ಸಾರ್ವಜನಿಕರು ಮೆಟ್ರೋ ಮತ್ತು ಬಿಎಂಟಿಸಿ ಸಾರಿಗೆ ವ್ಯವಸ್ಥೆಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.
ಇದೇ ವೇಳೆ, ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲು ಎರಡು ಹಂತದ ಮಾಕ್ ಡ್ರಿಲ್ಗಳನ್ನು ನಡೆಸಲಾಗಿದೆ. ಸೋಮವಾರ ಮೊದಲ ಹಂತದ ಡ್ರಿಲ್ ನಡೆದಿದ್ದು, ಗುರುವಾರ ಎರಡನೇ ಹಂತದ ಡ್ರಿಲ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಅಭ್ಯಾಸದಲ್ಲಿ ಪೊಲೀಸ್, ಎನ್ಎಸ್ಜಿ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಸಿಬ್ಬಂದಿಗಳು ಭಾಗಿಯಾಗಿದ್ದರು.