ಬೆಂಗಳೂರು: ದೇವನಹಳ್ಳಿ ಸಮೀಪ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಪಘಾತಕ್ಕೆ RTO ಅಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.
ಮೂಲಗಳ ಪ್ರಕಾರ, ನೆಲಮಂಗಲ ಮೂಲದ RTO ಅಧಿಕಾರಿ ದಿನೇಶ್ ಕುಮಾರ್ ಡಿ.ಕೆ. ಅವರು ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ವ್ಯಾಪ್ತಿಗೆ ಸೇರದ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಲು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಜೀಪ್ ಅನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿರುವ ಅಧಿಕಾರಿಗಳು, ಹೆದ್ದಾರಿಯಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೆ ಲಾರಿಯನ್ನು ತಡೆದಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಮತ್ತೊಂದು ಲಾರಿ ನಿಲ್ಲಿಸಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಘಟನೆ ಬಳಿಕ ಗಾಯಾಳುಗಳಿಗೆ ಸಹಾಯ ಮಾಡುವ ಬದಲು ಅಧಿಕಾರಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಳಾಗುತ್ತಿದೆ. ಈ ನಡೆ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾನೂನು ಜಾರಿಗೆ ಜವಾಬ್ದಾರರಾಗಿರುವ ಅಧಿಕಾರಿಗಳೇ ನಿಯಮ ಉಲ್ಲಂಘಿಸಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.