ಬೆಂಗಳೂರು: ಮಂಗಳೂರಿನಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಾರೀಕ್, 2025ರ ಡಿಸೆಂಬರ್ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದು ಕಳೆದ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ.
2022ರ ನವೆಂಬರ್ 19ರಂದು ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದನು. ಚಿಕಿತ್ಸೆ ಬಳಿಕ ಶಾರೀಕ್ ನನ್ನು ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದರು. ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ. ಕಾನೂನು ಪ್ರಕಾರ ಕ್ರಮಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯಗೊಳಿಸಿದೆ.
ವಿಶೇಷ ನ್ಯಾಯಾಲಯಕ್ಕೆ ಮೂರು ತಿಂಗಳ ಹಿಂದೆ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು ಏಪ್ರಿಲ್ 10ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಕುಕ್ಕರ್ ಬಾಂಬ್ ಸ್ಫೋಟ ಕುರಿತಂತೆ ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದರು.