ಬೆಂಗಳೂರು: ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ನಡೆದ ಸರಣಿ ಮೊಬೈಲ್ ಕಳ್ಳತನಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಮತ್ತು ಕಾನೂನು ಸಂಘರ್ಷದಲ್ಲಿದ್ದ ಹಲವಾರು ಮಕ್ಕಳನ್ನು ಮಂಗಳವಾರ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
18 ಲಕ್ಷ ರೂ. ಮೌಲ್ಯದ ವಿವಿಧ ಬ್ರಾಂಡ್ಗಳ 21 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 28 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ), ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯಗಳಿಸಿತು.
"ಬಂಧಿತ ಆರೋಪಿಗಳು ಟೂರ್ನಮೆಂಟ್ ವೀಕ್ಷಿಸಲು ಬಂದಿದ್ದ ಸಾರ್ವಜನಿಕರ ಮೊಬೈಲ್ ಫೋನ್ಗಳನ್ನು ಕದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಹಲವಾರು ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆಯಲಾಗಿದೆ. ಇದು ತನಿಖೆಯಲ್ಲಿದೆ" ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ಆರೋಪಿಯಿಂದ ವಿವಿಧ ಬ್ರಾಂಡ್ಗಳ 21 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ(ಪ್ರಮುಖ ಆರೋಪಿ) ಹಲವಾರು ಸಹಚರರು ಮತ್ತು ಅಪ್ರಾಪ್ತ ವಯಸ್ಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆ ಮುಂದುವರೆದಿದೆ
ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ಐಪಿಎಲ್ ಪಂದ್ಯದ ನಂತರ, ಕ್ರೀಡಾಂಗಣದಲ್ಲಿ ಮತ್ತು ಅದರ ಸುತ್ತಮುತ್ತ ಮೊಬೈಲ್ ಫೋನ್ ಕಳ್ಳತನದ ಬಗ್ಗೆ ದೂರುಗಳು ಬಂದಿವೆ. ಈ ಕಳ್ಳತನಗಳ ಬಗ್ಗೆ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.
"ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸಿಸಿಟಿವಿ ಮತ್ತು ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ಒಂದು ಗ್ಯಾಂಗ್ ಅನ್ನು ಬಂಧಿಸಿದೆ ಮತ್ತು ಅವರಿಂದ 21 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದೆ" ಎಂದು ಅವರು ಹೇಳಿದರು.
ಬಂಧಿತರಿಂದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಮತ್ತು ಭಾಗಿಯಾಗಿರುವ ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ, "ಅಪರಾಧದಲ್ಲಿ ಭಾಗಿಯಾಗಿರುವವರು ಇತರ ರಾಜ್ಯಗಳಿಂದ ಬಂದು ಹೋಟೆಲ್ನಲ್ಲಿ ತಂಗಿದ್ದರು ಮತ್ತು ಕಳ್ಳತನ ಮಾಡಿದ್ದಾರೆ.... ಅವರು ಈ ಉದ್ದೇಶಕ್ಕಾಗಿ(ಮೊಬೈಲ್ ಕಳ್ಳತನ) ಬಂದಿದ್ದಾರೆಯೇ ಮತ್ತು ಅವರು ಇತರ ಸ್ಥಳಗಳಲ್ಲಿ ಇದೇ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ಮಾಡಲಾಗುತ್ತಿದೆ" ಎಂದು ಅವರು ತಿಳಿಸಿದ್ದಾರೆ.