ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಒಂಬತ್ತು ಹಳ್ಳಿಗಳಲ್ಲಿ ಸುಮಾರು 7,481 ಎಕರೆ ಮತ್ತು 21.08 ಗುಂಟೆ ಪ್ರದೇಶದಲ್ಲಿ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಪ್ರಾಜೆಕ್ಟ್ (ಜಿಬಿಐಟಿ) ಅನುಷ್ಠಾನಕ್ಕೆ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಸುಮಾರು 18,133 ಕೋಟಿ ರೂ. ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮೂಲಕ ಅನುಷ್ಠಾನಗೊಳಿಸಲಾಗುತ್ತದೆ. ಯೋಜನೆಗೆ ಸಂಬಂಧಿಸಿದಂತೆ ರೂ.7,500 ಕೋಟಿ ರೂ.ಗಳ ಸಾಲಕ್ಕೆ ಗ್ಯಾರಂಟಿ ನೀಡಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಈ ಟೌನ್ಶಿಪ್ ಯೋಜನೆಯ ಮುಖ್ಯ ಉದ್ದೇಶ ‘ವರ್ಕ್-ಲೈವ್-ಪ್ಲೇ’ ಮಾದರಿಯಲ್ಲಿ ಅಭಿವೃದ್ಧಿ ಮಾಡಿ, ಬೆಂಗಳೂರು ನಗರದ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಹೊಸ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ (CBD) ರೂಪದಲ್ಲಿ ಇದು ಬೆಳೆಯಲಿದೆ ಎಂದು ಸರ್ಕಾರ ತಿಳಿಸಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆ ಎಂದು ಹೇಳಲಾಗುತ್ತಿರುವ ಈ ಪ್ರಾಜೆಕ್ಟ್ಗೆ ಕೆಲವೊಂದು ವಿರೋಧವೂ ವ್ಯಕ್ತವಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರೆ, ಕೆಲ ರೈತರು ಕೂಡ ಪ್ರತಿಭಟನೆ ನಡೆಸಿದ್ದಾರೆ.
ಭೂಸ್ವಾಧೀನಗಳಿಗೆ ಪರಿಹಾರವಾಗಿ ಹಣ ಪಡೆಯುವ ಅಥವಾ ಪ್ರತಿ ಏಕರೆಗೆ 9,693 ಚದರ ಅಡಿ ಅಭಿವೃದ್ಧಿಪಡಿಸಿದ ವಸತಿ ಜಾಗ ಪಡೆಯುವ ಆಯ್ಕೆಯನ್ನು ನೀಡಲಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.