ಬೆಂಗಳೂರು: ಇಲ್ಲಿನ ಆಭರಣ ಅಂಗಡಿಯೊಂದಕ್ಕೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳನ್ನು ದೋಚಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಏಪ್ರಿಲ್ 28 ರಂದು 8ನೇ ಮೈಲಿ ಬಳಿಯ ಹಾವನೂರಿನ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಆವರಣದಲ್ಲಿನ ಬೀಗ ಮುರಿದು ಒಳಗೆ ಪ್ರವೇಶಿಸಿದ ಅವರು, ಅಂಗಡಿಯ ಗೋಡೆಗೆ ರಂಧ್ರ ಕೊರೆದು ಹಿಂಭಾಗದಿಂದ ಒಳಗೆ ಪ್ರವೇಶಿಸಿದ್ದಾರೆ ಎಂದು ಶಂಕಿಸಲಾಗಿದೆ.
ಏಪ್ರಿಲ್ 28 ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಂಗಡಿ ಸಿಬ್ಬಂದಿ ಆವರಣಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಕಟ್ಟಡದ ಹಿಂಭಾಗಕ್ಕೆ ವ್ಯಾಪಕ ಹಾನಿಯಾಗಿರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಅಂದಾಜಿನ ಪ್ರಕಾರ, ಕೋಟ್ಯಂತರ ಮೌಲ್ಯದ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳು ಕಳ್ಳತನವಾಗಿವೆ.
ಕಪಾಟುಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದ್ದ ಹೆಚ್ಚಿನ ಬೆಳ್ಳಿ ವಸ್ತುಗಳು ಕಳ್ಳತನವಾಗಿದ್ದು, ಲಾಕರ್ನಲ್ಲಿ ಇರಿಸಲಾಗಿದ್ದ ಬೆಲೆಬಾಳುವ ವಸ್ತುಗಳು ಹಾಗೆಯೇ ಇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಂಗಡಿಯೊಳಗಿನ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಸುತ್ತಮುತ್ತಲ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಬಳಸಿಕೊಂಡು ಶಂಕಿತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ಳಿ ವಸ್ತುಗಳನ್ನು ಕೊಂಡೊಯ್ಯುವುದರ ಜೊತೆಗೆ ದುಷ್ಕರ್ಮಿಗಳು ಪಕ್ಕದ ಅಂಗಡಿಯ ಡಿಜಿಟಲ್ ವಿಡಿಯೋ ರೆಕಾರ್ಡರ್ (ಸಿಸಿಟಿವಿ) ಅನ್ನು ಸಹ ಕದ್ದೊಯ್ದಿದ್ದಾರೆ ಎಂದು ಅಧಿಕಾರಿ ಹೇಳಿದರು.
ತನಿಖಾಧಿಕಾರಿಗಳು ಅಂಗಡಿಯನ್ನು ಪ್ರವೇಶಿಸಲು ಬಳಸಿದ ಉಪಕರಣಗಳು ಮತ್ತು ತಂತ್ರಗಳನ್ನು ಸಹ ಪರಿಶೀಲಿಸುತ್ತಿದ್ದಾರೆ. ಅಂಗಡಿಯ ವಿನ್ಯಾಸದ ಬಗ್ಗೆ ಮೊದಲೇ ತಿಳಿದಿರುವ ವೃತ್ತಿಪರ ಗ್ಯಾಂಗ್ ಇದರಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.