ಮೈಸೂರು: ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಸಮೀಪದ ಪೊನ್ನಾಚಿ ಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೈಸೂರು ಡಿಪೋದಿಂದ ಬಂದ ಬಸ್, ಬುದ್ಧ ಪೂರ್ಣಿಮಾ ಪೂಜೆಗೆ ಬೆಟ್ಟಕ್ಕೆ ಭೇಟಿ ನೀಡಿದ್ದ ಭಕ್ತರನ್ನು ಕರೆದೊಯ್ಯುತ್ತಾ ಹನೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಬಸ್ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ವರದಿಯಾಗಿದೆ ಮತ್ತು ಗಾಯಾಳುಗಳನ್ನು ಹನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲೆ ಮಹದೇಶ್ವರ ಬೆಟ್ಟ ಮತ್ತು ತಾಳುಬೆಟ್ಟದ ನಡುವಿನ ಕಿರಿದಾದ ಘಾಟ್ ರಸ್ತೆಯಲ್ಲಿ ತಿರುವು ಪಡೆಯುವ ಸಮಯದಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ಉರುಳಿಬಿದ್ದಿದೆ. ಸ್ಥಳೀಯ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಘಟನೆಯಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ದೇವಾಲಯದತ್ತ ಸಾಗುತ್ತಿದ್ದ ವಾಹನ ಸಂಚಾರ ಹಲವು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತು. ಭಕ್ತರನ್ನು ಹೊತ್ತ ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ನಂತರ ಕ್ರೇನ್ ಸಹಾಯದಿಂದ ಬಸ್ ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು. ಇದೀಗ ಅಪಘಾತದ ನಿಖರವಾದ ಕಾರಣದ ತಿಳಿದುಕೊಳ್ಳಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.