ಬೆಂಗಳೂರು: ಏಪ್ರಿಲ್ 29ರಂದು ಸಂಭವಿಸಿದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತ ಹಿನ್ನೆಲೆಯಲ್ಲಿ ನಗರದಲ್ಲಿನ ಬೀದಿ ವ್ಯಾಪಾರಿಗಳ ಸಂಘಟನೆ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪರಿಹಾರ ಮೊತ್ತವನ್ನು ಹೆಚ್ಚಿಸಿ, ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ, ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಲಾಗುತ್ತಿರುವ ರೂ.5 ಲಕ್ಷ ಪರಿಹಾರವನ್ನು ರೂ.25 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದೆ. ಜೊತೆಗೆ ಗಾಯಗೊಂಡ ಪ್ರತಿಯೊಬ್ಬ ವ್ಯಾಪಾರಿಗೂ ರೂ.10 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ.
ಗಾಯಗೊಂಡವರು ಸಂಪೂರ್ಣ ಚೇತರಿಸಿಕೊಳ್ಳಲು ಹಲವು ತಿಂಗಳುಗಳು ಬೇಕಾಗುವ ಕಾರಣ, ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸಂಘಟನೆ ಹೇಳಿದೆ.
ಇದಲ್ಲದೆ, ಈ ದುರಂತದಲ್ಲಿ ಹಲವಾರು ವ್ಯಾಪಾರಿಗಳು ತಮ್ಮ ಸರಕುಗಳನ್ನು ಕಳೆದುಕೊಂಡಿರುವುದರಿಂದ, ಆ ನಷ್ಟಕ್ಕೂ ಪರಿಹಾರ ನೀಡಬೇಕು. ಅಪಾಯಕಾರಿ ಕಟ್ಟಡಗಳ ಸಮೀಪ ವ್ಯಾಪಾರ ನಡೆಸಬಾರದು ಎಂಬ ಸೂಚನೆ ಹಿನ್ನೆಲೆ ಸುರಕ್ಷಿತ ಮತ್ತು ಸೂಕ್ತ ಪರ್ಯಾಯ ವ್ಯಾಪಾರ ಸ್ಥಳಗಳನ್ನು ಗುರುತಿಸಿ ಸ್ಥಳ ಒದಗಿಸಲು ಸರ್ಕಾರ ತಕ್ಷಣವೇ ವ್ಯಾಪಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸಂಘ ಒತ್ತಾಯಿಸಿದೆ.
ಇದೇ ವೇಳೆ ಗೋಡೆ ಕುಸಿತಕ್ಕೆ ಕಾರಣರಾದವರನ್ನು ಗುರುತಿಸಲು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸಂಘಟನೆ ಒತ್ತಾಯಿಸಿದ್ದು, ಹವಾಮಾನ ಬದಲಾವಣೆಯಿಂದ ಕಾರ್ಮಿಕರು—ಬೀದಿ ವ್ಯಾಪಾರಿಗಳು, ಗಿಗ್ ಮತ್ತು ಪ್ಲಾಟ್ಫಾರ್ಮ್ ಕಾರ್ಮಿಕರು, ಪೌರಕಾರ್ಮಿಕರು—ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು ಎಂದೂ ಒತ್ತಾಯಿಸಿದೆ.