ತುಮಕೂರು: ಬೆಂಗಳೂರಿನ ಮಾದಾವರದಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ ಯೋಜನೆಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿ (DPR) ಒಂದು ವಾರದೊಳಗೆ ಸಲ್ಲಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಮಾದಾವರದಿಂದ ತುಮಕೂರಿಗೆ ಮೆಟ್ರೋ ಸಂಪರ್ಕ ವಿಸ್ತರಣೆಗೊಂಡರೆ, ಎರಡು ನಗರಗಳ ನಡುವೆ ಸಂಚಾರ ಸುಗಮವಾಗಲಿದೆ. DPR ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ತುಮಕೂರನ್ನು ಕ್ರೀಡಾ ಕೇಂದ್ರವಾಗಿ ರೂಪಿಸುವ ಉದ್ದೇಶವನ್ನೂ ವಿವರಿಸಿದ ಅವರು. ಇತ್ತೀಚೆಗೆ ತುಮಕೂರಿನಲ್ಲಿ ರಾಷ್ಟ್ರೀಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆದಿದ್ದು, ಪ್ರಸ್ತುತ ಮಹಿಳಾ ITF ಟೆನಿಸ್ ಟೂರ್ ಪಂದ್ಯಾವಳಿ ನಡೆಯುತ್ತಿದೆ ಎಂದು ತಿಳಿಸಿದರು.
ತುಮಕೂರಿನ ಪಿ. ಗೊಲ್ಲಹಳ್ಳಿ ಸಮೀಪ 42 ಎಕರೆ ಪ್ರದೇಶವನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಮೀಸಲಿರಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ಈ ಮೈದಾನ ಪೂರ್ಣಗೊಂಡ ಬಳಿಕ ಅಂತರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸುವ ಸಾಮರ್ಥ್ಯ ಹೊಂದಲಿದೆ. ಮುಂದಿನ ದಿನಗಳಲ್ಲಿ ತುಮಕೂರು ‘ಸ್ಪೋರ್ಟ್ಸ್ ಸಿಟಿ’ ಆಗಿ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು