ಬೆಂಗಳೂರು: ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಗಾಂಜಾ ಮಾರಾಟದ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂ ಗ್ರಾಮದಲ್ಲಿ ಅಪ್ರಾಪ್ತ ಮಕ್ಕಳು ಸಹ ಗಾಂಜಾ, ಅಫೀಮ್, ಚರಸ್ ಅಕ್ರಮ ಮಾರಾಟಕ್ಕೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಇದ್ದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಮಾಧ್ಯಮ ವರದಿ ಮಾಡಿದ್ದವು. ಇದರಿಂದ ಮಕ್ಕಳು ತಮ್ಮ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ನ್ಯಾಯಮೂರ್ತಿ ವೀರಪ್ಪ ಕಳವಳ ವ್ಯಕ್ತಪಡಿಸಿದರು.
ಆದ್ದರಿಂದ, ಈ ಪಿಡುಗನ್ನು ಬೇರುಸಹಿತ ತೆಗೆದುಹಾಕಲು ತನಿಖೆ ನಡೆಸುವ ಅವಶ್ಯಕತೆಯಿದೆ. ಕರ್ತವ್ಯ ಲೋಪಕ್ಕಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ಹೊರಿಸಬೇಕು ಎಂದರು. ಕಳೆದ ಐದು ವರ್ಷಗಳಲ್ಲಿ ಎಷ್ಟು ಮಾದಕ ದ್ರವ್ಯ ಮಾರಾಟ ಪ್ರಕರಣಗಳು ದಾಖಲಾಗಿವೆ. ಎಷ್ಟು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಈ ಪಿಡುಗನ್ನು ತಡೆಯಲು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ಮಕ್ಕಳು ಅಥವಾ ಮಾದಕ ವ್ಯಸನಿಗಳಿಗೆ ವ್ಯಸನಮುಕ್ತ ಚಿಕಿತ್ಸೆಯನ್ನು ನೀಡಲಾಗಿದೆಯೇ ಮತ್ತು ಗಂಜಾಂ ಹೊರತುಪಡಿಸಿ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿರುವ ಯಾವುದೇ ಇತರ ಹಳ್ಳಿಗಳ ಹೆಸರುಗಳನ್ನು ತಿಳಿಸುವಂತೆಯೂ ಅವರು ಕೋರಿದರು.
ಸುಪ್ರೀಂ ಕೋರ್ಟ್ ಒತ್ತಿಹೇಳಿದಂತೆ ಜನರ ಯೋಗಕ್ಷೇಮ ಮತ್ತು ಉತ್ತಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ರಾಜ್ಯದ ಕರ್ತವ್ಯ. ಪೊಲೀಸ್ ಇನ್ಸ್ಪೆಕ್ಟರ್, ತಹಶೀಲ್ದಾರ್, ಸಹಾಯಕ ಆಯುಕ್ತರು ಮತ್ತು ಇತರರು ಸೇರಿದಂತೆ 13 ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದರು. ದೂರಿನಲ್ಲಿ ಎತ್ತಲಾದ ವಿಷಯಗಳ ಕುರಿತು ಅಗತ್ಯ ದಾಖಲೆಗಳೊಂದಿಗೆ ಅಧಿಕಾರಿಗಳು ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ನಂತರ ದೂರಿನ ಪ್ರತಿಯನ್ನು ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ, ಮಂಡ್ಯದ ಎಸ್ಪಿ ಮತ್ತು ಡಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿದರು.