ಬೆಂಗಳೂರು: ಬಿಜೆಪಿಯ ಕೇಂದ್ರ ಸರ್ಕಾರ ಚುನಾವಣೆಗಳಲ್ಲಿ ತನ್ನ ಅಧಿಕಾರದ ಮೂಲಕ ರಾಜಕೀಯ ಯಂತ್ರಗಳನ್ನು ದುರ್ಬಳಕ್ಕೆ ಮಾಡಿಕೊಳ್ಳುತ್ತಿದ್ದು, ಈ ದುರ್ಬಳಕೆ ಪರಮಾವಧಿ ತಲುಪಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತಕಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ” ಎಂದರು.
ಬಿಜೆಪಿಯವರು ಕೇರಳ ಹಾಗೂ ಇತರೆ ರಾಜ್ಯಗಳನ್ನು ಪ್ರಶ್ನೆ ಮಾಡುತ್ತಿವೆ ಎಂದು ಕೇಳಿದಾಗ, “ಏನೆಲ್ಲಾ ನಡೆಯುತ್ತಿದೆ ಎಂದು ಮೊದಲಿನಿಂದಲು ನೋಡುತ್ತಿದ್ದೇವೆ. ಪಶ್ಚಿಮ ಬಂಗಾಳದಲ್ಲಿ 2.50 ಲಕ್ಷ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ ನಿಯೋಜಿಸಿ ಭಯದ ವಾತಾವರಣ ಸೃಷ್ಟಿಸಲಾಗಿತ್ತು. ಕ್ಷೇತ್ರ ಮರುವಿಂಗಡಣೆಯಲ್ಲಿ ಅಲ್ಪಸಂಖ್ಯಾತರನ್ನು ಒಂದು ಕಡೆಗೆ ಹಾಕಲಾಗಿತ್ತು. ಇದರಿಂದ ದೇಶದ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ” ಎಂದರು.
ನಾನು ಸೋತಿಲ್ಲ, ಹೀಗಾಗಿ ರಾಜೀನಾಮೆ ನೀಡುವುದಿಲ್ಲ ಎಂಬ ಮಮತಾ ಬ್ಯಾನರ್ಜಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವದಲ್ಲಿ ನಾವು ಹೋರಾಟ ಮಾಡಬೇಕು” ಎಂದು ತಿಳಿಸಿದರು.