ದುಬಾರೆ: ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನೂತನ ವಾಹನಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.
73 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ: ಪ್ರವಾಸಿಗರ ಅನುಕೂಲಕ್ಕಾಗಿ ಮತ್ತು ದುಬಾರೆ ಹಾಡಿಯಲ್ಲಿರುವ 150 ಮನೆಗಳ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನಗರಕ್ಕೆ ಬರಲು ಅನುಕೂಲವಾಗುವಂತೆ 7 ಕೋಟಿ 30 ಲಕ್ಷ ರೂ. ವೆಚ್ಚದಲ್ಲಿ ಗುಣಮಟ್ಟದ ತೂಗು ಸೇತುವೆ ನಿರ್ಮಿಸಲಾಗುತ್ತಿದೆ. ಈ ಮೂಲಕ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.
ದುಬಾರೆ ಆನೆ ಶಿಬಿರಕ್ಕೆ 100 ವರ್ಷಗಳ ಇತಿಹಾಸವಿದೆ. ಇಲ್ಲಿ 15 ಕುಮ್ಕಿ ಆನೆಗಳಿದ್ದು, ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿವೆ. ವಿವಿಧ ಕಾರ್ಯಚರಣೆಯಲ್ಲಿ ಭಾಗಿಯಾಗುತ್ತಿವೆ. ಆನೆಗಳಿಗೆ ಪೂಜ್ಯ ಸ್ಥಾನ ಇದೆ. ಹೀಗಾಗಿ ನಾವು ವನ್ಯಜೀವಿಗಳ ಸಂರಕ್ಷಣೆಗೂ ಮುಂದಾಗಬೇಕು.ಕಾಡಿನಂಚಿನ ಜನರೊಂದಿಗೆ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಕಾನೂನು ಪಾಲಿಸಿ, ಜನರಿಗೆ ಅರಿವು ಮೂಡಿಸಿ, ಆದರೆ ಹೆದರಿಸಬೇಡಿ ಎಂದು ಕಿವಿ ಮಾತು ಹೇಳಿದರು.
ಅರಣ್ಯದಂಚಿನ ಜನರಿಗೆ ಅನುಕೂಲವಾಗುವಂತೆ ಹಲವು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಅವರ ಜೀವನೋಪಾಯಕ್ಕೆ ನೆರವಾಗುವಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಶಾಲೆಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದೇವೆ ಎಂದರು.
ಸೆಕ್ಷನ್ 4, ಡೀಮ್ಡ್ ಅರಣ್ಯ ಮೊದಲಾದ ವಿಚಾರಗಳ ಬಗ್ಗೆ ಶಾಸಕರು ಪ್ರಸ್ತಾಪಿಸಿದ್ದು, ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ ಅವರು, ಇಂದು ಯಸಳೂರಿನಲ್ಲಿ ಅರ್ಜುನ ಆನೆಯ ಸ್ಮಾರಕ ಉದ್ಘಾಟನೆಗೆ ತೆರಳುತ್ತಿರುವುದಾಗಿ ತಿಳಿಸಿದರು.
ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಯನ್ನು ಈಶ್ವರ ಖಂಡ್ರೆ ತಂದಿದ್ದಾರೆ. ಕೊಡಗಿನಲ್ಲಿ ಆನೆ-ಮಾನವ ಸಂಘರ್ಷ ಹೆಚ್ಚಾಗಿದ್ದು, ತೋಟದ ಆನೆಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಬೇಕು, ಬೆಳೆ ಹಾನಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಜನಸಂಪರ್ಕ ಕಾರ್ಯಕ್ರಮದಡಿ ಫಲಾನುಭವಿಗಳಿಗೆ ಜೇನು ಪೆಟ್ಟಿಗೆ, ಕಾಡಿನಂಚಿನ ಗ್ರಾಮದ ಮಹಿಳೆಯರಿಗೆ ಹೊಲಿಗೆ ಯಂತ್ರ ಇತ್ಯಾದಿ ಸೌಲಭ್ಯಗಳನ್ನು ವಿತರಿಸಲಾಯಿತು.