ಬೆಂಗಳೂರು: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ವಿಜಯನಗರದ ಕೃಷ್ಣದೇವರಾಯ ಪಾಲಿಕೆ ಬಜಾರ್ ಕುರಿತ ವರದಿಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.
ಮಾರ್ಚ್ 31ರಂದು The New Indian express ಪತ್ರಿಕೆಯಲ್ಲಿ 20 months on, Rs 13 crore Bengaluru's underground Palike Bazaar lies shut as vendors return to footpaths ಶೀರ್ಷಿಕೆ ಅಡಿಯಲ್ಲಿ ಪ್ರಕಟವಾದ ವರದಿಯಲ್ಲಿ ರೂ.13 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕೃಷ್ಣದೇವರಾಯ ಪಾಲಿಕೆ ಬಜಾರ್ ನಲ್ಲಿ 79 ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದು, ವ್ಯಾಪಾರಿಗಳು ಇನ್ನೂ ವಿಜಯನಗರ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಮಾರ್ಗಗಳ ಮೇಲೆಯೇ ವ್ಯಾಪಾರ ನಡೆಸುತ್ತಿದ್ದಾರೆಂದು ತಿಳಿಸಲಾಗಿತ್ತು.
ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಲೋಕಾಯುಕ್ತರು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗಳಾದ ಫರ್ಜಾನಾ ಮತ್ತು ಮಧುರಾ, ಜೊತೆಗೆ ವಿಜಯನಗರ ಸಂಚಾರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಿರಿರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 7(2) ಅಡಿಯಲ್ಲಿ ಸ್ವಯಂಪ್ರೇರಿತ ಅಧಿಕಾರ ಬಳಸಿಕೊಂಡು ಪ್ರಕರಣ ದಾಖಲಿಸಿರುವ ಲೋಕಾಯುಕ್ತ ನ್ಯಾಯಮೂರ್ತಿಗಳು, ಸಂಬಂಧಿತ ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಆಡಳಿತ ವೈಫಲ್ಯವಿದೆಯೇ ಎಂಬುದನ್ನು ಪರಿಶೀಲಿಸಲು ಮುಂದಾಗಿದ್ದಾರೆ.
ಅಲ್ಲದೆ, ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ಅವರು, ಜೂನ್ 10ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಖುದ್ದಾಗಿ ಹಾಜರಾಗಬೇಕು ಹಾಗೂ ವರದಿಯಲ್ಲಿ ಉಲ್ಲೇಖಿಸಲಾದ ಸಮಸ್ಯೆಗಳ ಪರಿಹಾರಕ್ಕಾಗಿ ತೆಗೆದುಕೊಂಡ ಕ್ರಮಗಳ ವಿವರ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.