ದಾವಣಗೆರೆ: ಶುಕ್ರವಾರ ದಾವಣಗೆರೆ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿ ಸಾವಿಗೀಡಾಗಿದ್ದು, ಸುಮಾರು 45 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನನ್ನು ಹೊನ್ನಾಳಿ ತಾಲ್ಲೂಕಿನ ಕುಂದ್ರು ಗ್ರಾಮದ ನಿವಾಸಿ ದರ್ಶನ್ (23) ಎಂದು ಗುರುತಿಸಲಾಗಿದ್ದು, ಆತ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.
ಕಾಲೇಜಿಗೆ ತೆರಳಲು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುಗಳಲ್ಲಿ ಹೆಚ್ಚಿನವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆರು ಜನರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ದಾವಣಗೆರೆಯಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದಾಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮರಬನಹಳ್ಳಿ ಬಳಿ ಬಸ್ ಪಲ್ಟಿಯಾಗಿದೆ.
ಬಸ್ಸಿನ ಹಿಂಭಾಗದ ಆಕ್ಸಲ್ ಮುರಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಉರುಳಿ ಬಿದ್ದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದ ನಂತರ, ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು, ಈ ಮಾರ್ಗದಲ್ಲಿ ಸಾಕಷ್ಟು ಕೆಎಸ್ಆರ್ಟಿಸಿ ಬಸ್ಗಳು ಇಲ್ಲದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅವರು ಹೇಳಿದರು.
'ಅಪಘಾತದಲ್ಲಿ, ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದು, ಸುಮಾರು 45 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಸೇರಿದಂತೆ ಅವರಲ್ಲಿ ಹೆಚ್ಚಿನವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ' ಎಂದು ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್ ತೆಕ್ಕಣ್ಣವರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.