ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಆರು ಮೊಬೈಲ್ ಫೋನ್ಗಳು, ಎಂಟು ಸಿಮ್ ಕಾರ್ಡ್ಗಳು ಸೇರಿದಂತೆ ಹಲವು ನಿಷೇಧಿತ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಈ ಸಂಬಂಧ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದು, ಮೊಬೈಲ್ ಹೊಂದಿದ್ದ ಆರೋಪದಡಿ ನಾಲ್ವರು ವಿಚಾರಣಾಧೀನ ಕೈದಿಗಳ ಹೆಸರುಗಳನ್ನು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.
ಮೇ 8 ಮತ್ತು 9ರಂದು ನಡೆದ ದಾಳಿಯಲ್ಲಿ ಸಹಾಯಕ ಅಧೀಕ್ಷಕ ಟಿಕೆ.ಲೋಕೇಶ್ ಅವರ ಮೇಲ್ವಿಚಾರಣೆಯಲ್ಲಿ ಜೈಲಿನ ಸೆಕ್ಯುರಿಟಿ ಸೆಕ್ಷನ್-2ರ ಕೊಠಡಿ ಸಂಖ್ಯೆ 6ರಲ್ಲಿ ಪರಿಶೀಲನೆ ನಡೆಸಲಾಯಿತು.
ದಾಳಿಯ ವೇಳೆ ಮುಸ್ತಫಾ, ಅಬುಬಲ್ ರಹ್ಮಾನ್, ಸಲ್ಮಾನ್ ಮತ್ತು ಫಜಲ್ ಎಂಬ ವಿಚಾರಣಾಧೀನ ಕೈದಿಗಳ ಕೊಠಡಿಗಳಿಂದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಕೈದಿಗಳಿಂದ ನಾಲ್ಕು ಮೊಬೈಲ್ ಫೋನ್ಗಳು, ಏಳು ಸಿಮ್ ಕಾರ್ಡ್ಗಳು, ಒಂದು ಇಯರ್ಬಡ್, ಎರಡು ಇಯರ್ಫೋನ್ಗಳು, ಒಂದು ಚಾರ್ಜರ್ ಹಾಗೂ ಚಾರ್ಜಿಂಗ್ ಕನೆಕ್ಟರ್ ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಉಸ್ತುವಾರಿ ಸೂಪರಿಂಟೆಂಡೆಂಟ್ ಬಿ ಆರ್ ಅಧಾನಿ ನೀಡಿದ ದೂರಿನ ಆಧಾರದ ಮೇಲೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆಯೂ ಮೊಬೈಲ್ಗಳು ಜೈಲಿನೊಳಗೆ ಹೇಗೆ ಬಂದವು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ಕೊಠಡಿ ಸಂಖ್ಯೆ 11ರ ಸಮೀಪದ ಕಂಬದ ಬಳಿ ಎರಡು ಮೊಬೈಲ್ ಫೋನ್ಗಳು ಹಾಗೂ ಒಂದು ಸಿಮ್ ಕಾರ್ಡ್ ಪತ್ತೆಯಾಗಿದೆ. ಆದರೆ, ಅವು ಯಾರಿಗೆ ಸೇರಿದ್ದವು ಎಂಬುದು ಇನ್ನೂ ಪತ್ತೆಯಾಗಿಲ್ಲ.
ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಸಹಕರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜೈಲು ಅಧೀಕ್ಷಕರು ದೂರಿನಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆಯ ಸೆಕ್ಷನ್ 42 ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.