ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗಳಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಈ ಸಂಬಂಧ ಬಾಲಕನ ಪೋಷಕರು ಕಳೆದ ವಾರ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ದೂರು ದಾಖಲಿಸಿದ್ದರು, ನಂತರ ಸ್ಥಳೀಯ ಪೊಲೀಸರು 'ಶೂನ್ಯ ಎಫ್ಐಆರ್' ದಾಖಲಿಸಿದ್ದರು ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, 14 ವರ್ಷದ ಬಾಲಕ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ನಡೆಸುತ್ತಿರುವ ಹಾಸ್ಟೆಲ್ನಲ್ಲಿ ಅಧ್ಯಯನ ಮಾಡುತ್ತಿದ್ದಾಗ ಮತ್ತು ವಾಸಿಸುತ್ತಿದ್ದಾಗ ಈ ಘಟನೆ ನಡೆದಿರುವುದರಿಂದ, ಪ್ರಕರಣವನ್ನು ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮೀಣ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹರಿಹರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಈಗಾಗಲೇ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಬಾಲಕನ ಹೇಳಿಕೆಯನ್ನು ಸಹ ಅಧಿಕೃತವಾಗಿ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಯನ್ನು ಎಚ್ಚರಿಕೆಯಿಂದ ಮುಂದುವರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸ್ವಾಮೀಜಿ ಬಾಲಕನಿಗೆ ಕಿರುಕುಳ ನೀಡಿ ಲೈಂಗಿಕ ಶೋಷಣೆ ಮಾಡಿದ್ದಾರೆ. ಸ್ವಾಮೀಜಿ ಬಾಲಕನಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಾಲಕನಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
"ದೂರುದಾರರ ಮತ್ತು ಬಾಲಕನ ಹೇಳಿಕೆಗಳನ್ನು ದಾಖಲಿಸಲಾಗಿದೆ. ಬಾಲಕನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ವಿವರವಾದ ತನಿಖೆ ನಡೆಯುತ್ತಿದೆ ಮತ್ತು ಎಲ್ಲಾ ಆರೋಪಗಳನ್ನು ಪರಿಶೀಲಿಸಲಾಗುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿಗೆ ವಚನಾನಂದ ಶ್ರೀಗಳನ್ನು ‘ಮಸಾಜ್ ಪ್ರಿಯ ಸ್ವಾಮೀಜಿ’ ಎಂದ ಟ್ರಸ್ಟಿ ಚಂದ್ರಶೇಖರ ಪೂಜಾರ್ ಅವರು ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಹಾಸ್ಟೇಲ್ನ ಮೂವರು ಮಕ್ಕಳು ಶ್ರೀಗಳ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೂ ದೂರು ನೀಡಿದ್ದರು.