ಬೆಂಗಳೂರು: ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯಕ್ಕಾಗಿ ಕರೆ ನೀಡಿರುವುದನ್ನು ಅನುಸರಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗುರುವಾರ ತಮ್ಮ ಅಧಿಕೃತ ಬೆಂಗಾವಲು ಪಡೆಯ ಗಾತ್ರವನ್ನು ಅರ್ಧದಷ್ಟು ಕಡಿಮೆ ಮಾಡಿದ್ದಾರೆ.
ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಇಂಧನ ಸಂರಕ್ಷಣೆ ಮತ್ತು ವಿದೇಶಿ ವಿನಿಮಯ ವೆಚ್ಚವನ್ನು ಕಡಿಮೆ ಮಾಡುವ ಪ್ರಧಾನಿಯವರ ಮನವಿಗೆ ಪ್ರತಿಕ್ರಿಯೆಯಾಗಿ ಗೆಹ್ಲೋಟ್ ಈ ಕ್ರಮ ಕೈಗೊಂಡಿದ್ದಾರೆ ಎಂದು 'X' ನಲ್ಲಿ ಲೋಕಭವನ ಪೋಸ್ಟ್ ಮಾಡಿದೆ.
"ಪ್ರಧಾನಿ ನರೇಂದ್ರ ಮೋದಿ ಅವರ ಮನವಿಯನ್ನು ಅನುಸರಿಸಿ ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ತಮ್ಮ ಬೆಂಗಾವಲು ಪಡೆಯನ್ನು ಕನಿಷ್ಠ ಅಗತ್ಯವಿರುವ ಸಂಖ್ಯೆಗೆ ಇಳಿಸಿದ್ದಾರೆ" ಎಂದು ಪೋಸ್ಟ್ನಲ್ಲಿ ಹೇಳಲಾಗಿದೆ.
ಹೈದರಾಬಾದ್ನಲ್ಲಿ ಬಿಜೆಪಿ ಆಯೋಜಿಸಿದ್ದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ನಡುವೆ ವಿದೇಶಿ ವಿನಿಮಯವನ್ನು ಸಂರಕ್ಷಿಸುವ ಮತ್ತು ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಕರೆ ನೀಡಿದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ನಾಗರಿಕರು ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡಬೇಕು, ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಬಳಸಬೇಕು, ಕಾರ್ಪೂಲಿಂಗ್ ಅಳವಡಿಸಿಕೊಳ್ಳಬೇಕು, ವಿದ್ಯುತ್ ವಾಹನಗಳ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಪಾರ್ಸೆಲ್ ಸಾಗಣೆಗೆ ರೈಲ್ವೆ ಸೇವೆಗಳನ್ನು ಬಳಸಿಕೊಳ್ಳಬೇಕು ಎಂದು ಪ್ರಧಾನಿ ಒತ್ತಾಯಿಸಿದ್ದರು.