ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಗಳೂರು ಕೆರೆ ಬಳಿ ಮಾನವ ತಲೆಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳು ಶನಿವಾರ ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಕೆರೆ ಬಳಿ ಕುರಿ ಮೇಯಿಸುತ್ತಿದ್ದ ಕುರಿಗಾಹಿಗಳು ಈ ಅಸ್ಥಿಪಂಜರಗಳನ್ನು ಕಂಡು ತಕ್ಷಣವೇ ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಅಸ್ಥಿಪಂಜರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದಾರೆ.
ಸ್ಥಳ ಪರಿಶೀಲಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರು ಮಾತನಾಡಿ, ತಲೆಬುರುಡೆ ಮತ್ತು ಅಸ್ಥಿಪಂಜರಗಳು ಚದುರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಾಯಿಗಳು ಅವುಗಳನ್ನು ಎಳೆದಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮಹಿಳೆಯ ಸೀರೆ ಸೇರಿದಂತೆ ಕೆಲ ವಸ್ತ್ರಗಳು ಪತ್ತೆಯಾಗಿರುವುದರಿಂದ ಮೃತದೇಹ ಮಹಿಳೆಯದ್ದಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೇಸಿಗೆಯ ಕಾರಣ ಕೆರೆಯಲ್ಲಿ ನೀರಿನ ಮಟ್ಟ ಇಳಿದಿದ್ದರಿಂದ ಈ ಅಸ್ಥಿಪಂಜರಗಳು ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಅಸ್ಥಿಪಂಜರಗಳು ಪುರುಷನದ್ದೇ ಅಥವಾ ಮಹಿಳೆಯದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. FSL ವರದಿ ಬಂದ ಬಳಿಕ ನಿಖರ ಮಾಹಿತಿ ದೊರೆಯಲಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.