ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರದಿಂದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ.
ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯಕ್ಕೆ ಶೇ 12.5 ವೇತನ ಪರಿಷ್ಕರಣೆಗೆ ಒಪ್ಪಿದೆ. ಅಲ್ಲದೆ, 26 ತಿಂಗಳ ವೇತನ ಹಿಂಬಾಕಿಯ ಮೊದಲ ಕಂತಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ನೌಕರರು ಸರ್ಕಾರದ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳು ಈಡೇರದ ಹೊರತು ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಬ್ಬಂದಿಗೆ ಸರ್ಕಾರ ಖಡಕ್ ಎಚ್ಚರಿಕೆ
ಮೇ.20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ನೌಕರರಿಗೆ ರಾಜ್ಯ ಸರ್ಕಾರ ಕಠಿಣ ಎಚ್ಚರಿಕೆ ನೀಡಿದೆ.
ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಹೇಳಿದೆ.
ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾ ಆದೇಶಿಸಿದ್ದಾರೆ.
ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಕಾರಣ ಮೇ 20ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳಬೇಕು. ಸಿಬ್ಬಂದಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು. ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಿ. ಅನಿವಾರ್ಯ ಸಂದರ್ಭದಲ್ಲಿ ಅಥವಾ ಅವಶ್ಯವಿದ್ದಲ್ಲಿ, ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವಂತೆ ಅಕ್ರಂ ಪಾಷಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯವರು ಆಡಳಿತ ವರ್ಗಕ್ಕೆ ನೀಡಿರುವ ಮುಷ್ಕರದ ನೋಟಿಸ್ ಸಂಬಂಧಪಟ್ಟ ವಿವಾದವು ಸದ್ಯ ರಾಜ್ಯದ ಕಾರ್ಮಿಕ ಆಯುಕ್ತರ ಮುಂದೆ ರಾಜೀ ಸಂಧಾನದಲ್ಲಿದ್ದು, ಕೈಗಾರಿಕಾ ವಿವಾದಗಳ ಕಾಯಿದೆ-1947 ಮತ್ತು ನಿಯಮಗಳನ್ವಯ ‘ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ’ ಯ ನೌಕರರ ಮುಷ್ಕರದ ನೋಟಿಸ್ ಸಂಬಂಧಪಟ್ಟ ವಿವಾದವು ರಾಜಿ ಸಂಧಾನದಲ್ಲಿ ರುವಾಗ ನೌಕರರು ಮುಷ್ಕರ ಹೂಡುವಂತಿಲ್ಲ.
ಹೀಗಾಗಿ ನಿಗಮದ ನೌಕರರು ಯಾವುದೇ ಕಾರಣಕ್ಕೂ ಉದ್ದೇಶಿತ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಬಾರದು. ಮತ್ತು ತಮ್ಮ ದೈನಂದಿನ ಕರ್ತವ್ಯಕ್ಕೆ ಅವಶ್ಯ ಹಾಜರಾಗಿ, ರಾಜ್ಯದ ಜನರ ಪ್ರೀತಿ ವಿಶ್ವಾಸಕ ಪಾತ್ರರಾಗಬೇಕಾಗಿ ಮನವಿ ಮಾಡಲಾಗಿದೆ.
ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.