ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ಮೇ 21 ರಂದು ಬೆಂಗಳೂರಿನ ಲೋಕ ಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರಾವಧಿಯಲ್ಲಿ 89 ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ವಿದ್ಯಾರ್ಥಿಗಳ ಸಂಕಷ್ಟವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು.
ಕೇಂದ್ರವು ವಿದ್ಯಾರ್ಥಿಗಳನ್ನು ನರಕಕ್ಕೆ ತಳ್ಳಿದೆ, ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಆಹ್ವಾನಿಸಿದ್ದೇವೆ ಎಂದು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಮಾಹಿತಿ ನೀಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ನಂತರ, ಮೋದಿ ಆಡಳಿತದಲ್ಲಿ ನಡೆದಿರುವುದು ಇಂಡಿಯನ್ ಪೇಪರ್ ಲೀಕ್ ಎಂದು ಅವರು ವ್ಯಂಗ್ಯವಾಡಿದರು. ರಾಜಸ್ಥಾನ ಶಿಕ್ಷಣ ಸಚಿವರ ಆಪ್ತರು ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಇದ್ದಾರೆ" ಎಂದು ಅವರು ಆರೋಪಿಸಿದರು.