ಮೈಸೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಸಮಗ್ರ ಯೋಜನಾ ವರದಿ (DPR) ಸಿದ್ಧಗೊಂಡಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಮಧ್ಯರಂಗ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಅನುಮೋದನೆ ದೊರೆತ ಬಳಿಕ ಯೋಜನೆಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದೆ. ಯೋಜನೆಗಾಗಿ ಪ್ರತ್ಯೇಕ ಕಚೇರಿಯನ್ನೂ ಆರಂಭಿಸಲಾಗಿದೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರಿಹಾರ ನೀಡಲು ಭೂಮಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ, “ಮೇಕೆದಾಟು ಯೋಜನೆಗೆ ತಮಿಳುನಾಡಿಗೆ ವಿರೋಧಿಸುವ ಹಕ್ಕಿಲ್ಲ. ಈ ವಿಷಯವನ್ನು ಕೇಂದ್ರ ಜಲ ಆಯೋಗವೇ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಸೂಚಿಸಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಮೂರು ವರ್ಷ ಪೂರ್ಣಗೊಳಿಸಿರುವ ಕುರಿತು ಮಾತನಾಡಿ, ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. “ಭೂ ಗ್ಯಾರಂಟಿ” ಯೋಜನೆಯನ್ನು ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲಾಗಿದೆ. ಮನೆ ಮಾಲೀಕರ ಹಾಗೂ ಆಸ್ತಿಯ ಛಾಯಾಚಿತ್ರ ಹೊಂದಿರುವ ದಾಖಲೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಈ ರೀತಿಯ ಕೆಲಸವನ್ನು ಹಿಂದಿನ ಯಾವುದೇ ಸರ್ಕಾರ ಮಾಡಿರಲಿಲ್ಲ ಎಂದರು
ಇದೇ ವೇಳೆ ಮುಂದಿನ ಎರಡು ವರ್ಷಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಳಿಕ ಈ ವರ್ಷ ಮಳೆಯ ಕೊರತೆ ಸಂಭವಿಸುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತಪಡಿಸಿ ಅವರು, ಮುಂಗಾರು ವಿಫಲವಾದರೆ ರೈತರ ರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸರ್ಕಾರ ಈಗಾಗಲೇ ಚರ್ಚೆ ಆರಂಭಿಸಿದೆ ಎಂದು ಹೇಳಿದರು.
ಇದೇ ವೇಳೆ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ ನಾಯಕರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಯನ್ನು ತಳ್ಳಿ ಹಾಕಿದ ಶಿವಕುಮಾರ್, ಚಾಮರಾಜನಗರ ಐತಿಹಾಸಿಕ ಹಾಗೂ ಪವಿತ್ರ ನೆಲ. ಭಕ್ತಿ ಇರುವಲ್ಲಿ ದೇವರಿರುತ್ತಾರೆ ಎಂದು ಹೇಳಿದರು.