ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇಬ್ಬರೂ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರು ನಗರದ ಫ್ರೀಡಂ ಪಾರ್ಕ್'ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯ ಅಕ್ರಮಗಳು ದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿರುವುದು ಗಂಭೀರ ವಿಚಾರ ಎಂದು ಹೇಳಿದರು.
ವಿದ್ಯಾರ್ಥಿಗಳು ಒಂದು ವರ್ಷ ಕಠಿಣ ಪರಿಶ್ರಮ ಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಪೋಷಕರು ಸಾವಿರಾರು ರೂಪಾಯಿ ವೆಚ್ಚ ಮಾಡಿ ಕೋಚಿಂಗ್ ಕೇಂದ್ರಗಳಿಗೆ ಕಳುಹಿಸುತ್ತಾರೆ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಕನಸುಗಳನ್ನು ನಾಶ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರವು ನೀಟ್ ಪರೀಕ್ಷೆ ನಡೆಸುವ ಹೊಣೆಗಾರಿಕೆಯನ್ನು ಸರಿಯಾಗಿ ನಿರ್ವಹಿಸಲು ವಿಫಲವಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದರೂ ಪ್ರಧಾನಿ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಯಾರೂ ನೈತಿಕ ಹೊಣೆ ಹೊತ್ತಿಲ್ಲ. ಪರೀಕ್ಷೆಯ ದಿನಾಂಕ ಬದಲಾಯಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ವಿದ್ಯಾರ್ಥಿಗಳ ಮುಂದೆ ಕ್ಷಮೆ ಕೇಳಬೇಕು ಎಂದು ಹೇಳಿದರು.
ಕರ್ನಾಟಕದಲ್ಲಿ ಈ ಹಿಂದೆ ಸಿಇಟಿ ವ್ಯವಸ್ಥೆಯ ಮೂಲಕ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗುತ್ತಿತ್ತು. ಆದರೆ, 2016ರಲ್ಲಿ NEET ಜಾರಿಗೆ ಬಂದ ಬಳಿಕ ದೇಶದಾದ್ಯಂತ ಗೊಂದಲ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳು ನಡೆದಿವೆ.
ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳು ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಈ ವ್ಯವಸ್ಥೆ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ರಾಜ್ಯಗಳಿಗೆ ಸ್ವತಂತ್ರವಾಗಿ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುವ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿದ ಅವರು, ಶಿಕ್ಷಣವು ಸಂಯುಕ್ತ ಪಟ್ಟಿಯ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ಅತಿಯಾದ ಕೇಂದ್ರೀಕರಣ ಮಾಡಬಾರದು ಎಂದರು.
ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದಿಂದ ಮನನೊಂದು ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವರದಿಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು, ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಜೊತೆಗೆ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರನ್ನು “ಕೊಲೆಗಡುಕರು” ಎಂದು ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ವಿದೇಶ ಪ್ರವಾಸವನ್ನು ಮೊಟಕುಗೊಳಿಸಿ ದೇಶಕ್ಕೆ ಮರಳಿ ವಿದ್ಯಾರ್ಥಿಗಳ ಎದುರು ನೇರವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.