ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.
ಗುರುವಾರ (ಮೇ 21) ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಲಿಖಿತ ಶಿಫಾರಸಿನ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.
2022ರ ಮಹಾಶಿವರಾತ್ರಿಯಂದು ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಪೂಜೆ ವೇಳೆ ಭಾರಿ ಕೋಮು ಗಲಭೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟ, ಪೊಲೀಸರ ಮೇಲಿನ ಹಲ್ಲೆ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯಾಗಿತ್ತು. ಈ ಸಂಬಂಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಇದರಂತೆ ಗಲಭೆಯಲ್ಲಿ ಭಾಗಿಯಾಗಿದ್ದವರ ಮೇಲಿನ ಕೇಸ್ಗಳನ್ನು ಕೈಬಿಟ್ಟಿರುವುದಕ್ಕೆ ಹಿಂದೂ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.
ಇದಲ್ಲದೆ, ಕನ್ನಡ ಪರ ಹೋರಾಟಗಾರರ ವಿರುದ್ಧದವು ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ.
ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧದ 10 ಪ್ರಕರಣಗಳು, ಕಾವೇರಿ ಹೋರಾಟಗಾರರ ವಿರುದ್ಧದ ಪ್ರಕರಣಗಳು, ಕನ್ನಡ ಪರ ಹೋರಾಟ, ಕಳಸಾ-ಬಂಡೂರಿ ಯೋಜನೆ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ರೈತರು ಹಾಗೂ ದಲಿತ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನೂ ಹಿಂಪಡೆಯಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಈ ನಡುವೆ ಸರ್ಕಾರದ ನಿರ್ಣಯದ ಕುರಿತು ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸರ್ಕಾರ ಒಂದು ಕಡೆ ಹಿಂದೂ ಕಾರ್ಯಕರ್ತರನ್ನ ಗುರಿ ಮಾಡಿ ಸುಳ್ಳು ಮೊಕದ್ದಮೆ ದಾಖಲಿಸುವ ಜೊತೆಗೆ ರೌಡಿಶೀಟ್ ತೆರೆದು ಪೊಲೀಸ್ ಇಲಾಖೆಯ ಮೂಲಕ ಕಿರುಕುಳ ಕೊಡುವ ಕೆಲಸ ಮಾಡುತ್ತಿದೆ. ಮತ್ತೊಂದು ಕಡೆ ಮುಸ್ಲಿಮರ ಮೇಲಿನ ಕ್ರಿಮಿನಲ್ ಕೇಸ್ ವಾಪಸ್ ಪಡೆಯುವ ಕೆಲಸ ಮಾಡುತ್ತಿದೆ.
ಕೆಲವು ಬೆಂಕಿ ಹಚ್ಚಿದ ಪ್ರಕರಣ, ಆಸ್ತಿ-ಪಾಸ್ತಿ ನಷ್ಟ ಮಾಡಿದ ಪ್ರಕರಣ ಸೇರಿದಂತೆ ಗಂಭೀರ ಕೇಸ್ ವಾಪಸ್ ಪಡೆದುಕೊಂಡು ನಾವು ಕ್ರಿಮಿನಲ್ ಪರ ಎಂಬ ಕೆಟ್ಟ ಸಂದೇಶ ಕೂಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ, ಕನ್ನಡ ಸಂಘಟನೆಗಳು, ರೈತರ ಮೇಲೆ ಇದ್ದ ಕೇಸ್ ಬಗ್ಗೆ ಸಂಪುಟ ಉಪ ಸಮಿತಿ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಕಾನೂನಾತ್ಮಕವಾಗಿ ಕೇಸ್ ಹಿಂಪಡೆಯಲು ತೀರ್ಮಾನ ಆಗಿದೆ ಹೇಳಿದ್ದಾರೆ.
ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ಹಿಂಪಡೆಯುವ ಕುರಿತ ಪ್ರಶ್ನೆಗೆ ಉತ್ತರಿಸಿ, ಅದರ ಬಗ್ಗೆ ಸಂಕ್ಷಿಪ್ತವಾಗಿ ಹೇಳಲು ಹೋಗಲ್ಲ. ಎಲ್ಲವೂ ಚರ್ಚೆ ಮಾಡಿಯೇ ತೀರ್ಮಾನ ಮಾಡಲಾಗಿದೆ. ಇದು ಏಕಾಏಕಿ ತೀರ್ಮಾನವಲ್ಲ ಎಂದು ತಿಳಿಸಿದ್ದಾರೆ.