ಬೆಂಗಳೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಮೂಲಕ ಬಡವರ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಕುರಿತು ಕಾಂಗ್ರೆಸ್ ಶಾಸಕರು ಮತ್ತು ಬೂತ್ ಮಟ್ಟದ ಏಜೆಂಟ್ಗಳಲ್ಲಿ ಜಾಗೃತಿ ಮೂಡಿಸಲು ಪಕ್ಷವು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರು ಈ ಪ್ರಕ್ರಿಯೆಯ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದೇನೆ. ಈಗಾಗಲೇ ಸಭೆಗಳನ್ನು ಕರೆಯಲಾಗುತ್ತಿದ್ದು, ದಿನಾಂಕಗಳನ್ನೂ ಪ್ರಕಟಿಸಲಾಗಿದೆ. ಇದೇ ಕಾರಣಕ್ಕೆ ನಾವು ಜಾಗೃತಿ ಮೂಡಿಸಲು ಮುಂದಾಗಿದ್ದೇವೆ.
ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಅರ್ಜಿ ಸಲ್ಲಿಸುವುದು ಅನಿವಾರ್ಯವಾಗಿದೆ, ಇಲ್ಲದಿದ್ದರೆ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಇತರ ರಾಜ್ಯಗಳಲ್ಲಿಯೂ ಇಂತಹ ಘಟನೆಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಒಂದೊಮ್ಮೆ ಮತದಾನದ ಹಕ್ಕು ಕೈತಪ್ಪಿದರೆ, ನಾಗರಿಕರು ಪೆನ್ಷನ್ ಮತ್ತು ಗೃಹಲಕ್ಷ್ಮಿ ಯೋಜನೆಯೂ ಸೇರಿದಂತೆ ಸರ್ಕಾರದ ಹಲವು ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ. ಹೀಗಾಗಿಯೇ ನಾವು ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.