ಮಂಗಳೂರು: ಬಹುನಿರೀಕ್ಷಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಜೂನ್ ತಿಂಗಳಲ್ಲೇ ಆರಂಭವಾಗಲಿದ್ದು, ಈ ಸೇವೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಶನಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು-ಹಾಸನ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಈ ಭಾಗದಲ್ಲಿ ವೇಗದ ರೈಲು ಜಾಲ ಮತ್ತಷ್ಟು ವಿಸ್ತರಿಸಿದೆ ಎಂದು ಹೇಳಿದರು.
ಬೆಂಗಳೂರು-ಕಾರವಾರ ವಂದೇ ಭಾರತ್ ರೈಲು ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರಾವಳಿ ಭಾಗದ ಮೂವರು ಸಂಸದರು ರೈಲು ಸಂಪರ್ಕ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದು, ಈ ಬೇಡಿಕೆಯನ್ನು ರೈಲ್ವೆ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.
ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು.
ಸುಮಾರು 332 ಕಿ.ಮೀ ಉದ್ದದ ಈ ರೈಲು ಮಾರ್ಗಕ್ಕೆ ಅಂದಾಜು ರೂ.3,300 ಕೋಟಿ ವೆಚ್ಚವಾಗಲಿದ್ದು, ಅಂತಿಮ ಸ್ಥಳ ಸಮೀಕ್ಷೆ (FLC) ಪೂರ್ಣಗೊಂಡು ಅನುಮೋದನೆಯೂ ದೊರೆತಿದೆ ಎಂದರು.
ಹಾಸನ-ಮಂಗಳೂರು ನಡುವಿನ 247 ಕಿ.ಮೀ ರೈಲು ಮಾರ್ಗ ದ್ವಿಪಥ ಕಾಮಗಾರಿಯ ಅಂತಿಮ ಸ್ಥಳ ಸಮೀಕ್ಷೆ ಪ್ರಗತಿಯಲ್ಲಿದೆ. ಅಲ್ಲದೆ, ಶೋರ್ನೂರು-ಮಂಗಳೂರು ನಡುವಿನ 3ನೇ ಮತ್ತು 4ನೇ ರೈಲು ಮಾರ್ಗಗಳ ಅಭಿವೃದ್ಧಿಗೂ ಯೋಜನೆ ರೂಪಿಸಲಾಗಿದ್ದು, ಈ ಮಾರ್ಗದಲ್ಲಿ ಗಂಟೆಗೆ 160 ಕಿ.ಮೀ ವೇಗದಲ್ಲಿ ರೈಲು ಸಂಚರಿಸುವಂತೆ ವಿನ್ಯಾಸಗೊಳಿಸಲಾಗುತ್ತದೆ ಎಂದು ಹೇಳಿದರು.
ಮಂಗಳೂರು ಪ್ರತ್ಯೇಕ ರೈಲ್ವೆ ವಿಭಾಗ ಸ್ಥಾಪನೆ ಹಾಗೂ ದಕ್ಷಿಣ ರೈಲ್ವೆಯ ಮೈಸೂರು ವಿಭಾಗ, ದಕ್ಷಿಣ ಪಶ್ಚಿಮ ರೈಲ್ವೆ ಮತ್ತು ಕೊಂಕಣ ರೈಲ್ವೆಯನ್ನು ಒಂದೇ ಆಡಳಿತಾತ್ಮಕ ವ್ಯವಸ್ಥೆಯಡಿ ತರಲು ಪ್ರಕ್ರಿಯೆ ನಡೆಯುತ್ತಿದೆ ಎಂದೂ ಸಚಿವರು ಮಾಹಿತಿ ನೀಡಿದರು.
ಈ ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸಲಾಗುತ್ತದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಹೊಸ ರೈಲು ನಿಲ್ದಾಣ ಸ್ಥಾಪನೆ ಕುರಿತೂ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ರೈಲ್ವೆ ಯೋಜನೆಗಳಿಗೆ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ ಎಂದು ಆರೋಪಿಸಿದ ಅವರು, ಮುಂದಿನ ದಿನಗಳಲ್ಲಿ ಭೂಸ್ವಾಧೀನ ಪರಿಹಾರವನ್ನು ರೈಲ್ವೆ ಇಲಾಖೆ ನೇರವಾಗಿ ಪಾವತಿಸಲಿದೆ ಎಂದು ಹೇಳಿದರು.
ಮಂಗಳೂರು ಜಂಕ್ಷನ್ನಲ್ಲಿ ರೂ.38 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳಲಿವೆ. ಸರಕು ಸಾಗಣೆ ರೈಲುಗಳಿಗಾಗಿ ಹೆಚ್ಚುವರಿ ಹಳಿ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದರು.
ಇದೇ ವೇಳೆ, ಮಂಗಳೂರು ರೈಲು ಅಭಿವೃದ್ಧಿಗೆ ಸಮಗ್ರ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರಿಗೆ ಸೂಚನೆ ನೀಡಿದ ಸಚಿವರು, ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ನಿಲ್ದಾಣಗಳಲ್ಲಿ ಕನ್ನಡ ಬಲ್ಲ ಸಿಬ್ಬಂದಿಯನ್ನು ನೇಮಿಸಲು ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ಮಂಗಳೂರು-ಸುಬ್ರಹ್ಮಣ್ಯ ನಡುವೆ MEMU ರೈಲು ಸೇವೆ ಆರಂಭಿಸುವ ಪ್ರಸ್ತಾವನೆಯನ್ನೂ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.