ಕಲಬುರಗಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರಕ್ಕೆ ಮಾನವೀಯತೆ ಇದ್ದರೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು” ಎಂದು ಹೇಳಿದರು.
ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಅನ್ಯಾಯಕ್ಕೆ ಒಳಗಾಗಿದ್ದಾರೆ. ಇದೀಗ ಅವರು ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಇದೇ ಮೊದಲ ಘಟನೆಯಲ್ಲ. ಪರೀಕ್ಷೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ಕೂಡ ಅಸಮಾಧಾನ ವ್ಯಕ್ತಪಡಿಸಿದೆ ಎಂದು ತಿಳಿಸಿದರು.
ಇದೇ ವೇಳೆ ವೈದ್ಯಕೀಯ ಪ್ರವೇಶ ಪರೀಕ್ಷೆಗಳ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಬೇಕು ಎಂದು ಒತ್ತಾಯಿಸಿದರು.
ಸಿಇಟಿ (CET) ಕೌನ್ಸೆಲಿಂಗ್ ಕುರಿತು ಮಾತನಾಡಿ, ನಿಗದಿತ ವೇಳಾಪಟ್ಟಿಯಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೌನ್ಸೆಲಿಂಗ್ ಮೂಲಕ ವಿದ್ಯಾರ್ಥಿಗಳು ಅವರಿಗೆ ಹಂಚಿಕೆಯಾಗುವ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು ಎಂದು ತಿಳಿಸಿದರು.
ವೈದ್ಯಕೀಯ ಸೀಟು ದೊರೆತಲ್ಲಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕವನ್ನು ಹಿಂತಿರುಗಿಸಲು ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆಯ
ನೀಟ್ ಮರುಪರೀಕ್ಷೆ ಜೂನ್ 21ರಂದು ನಡೆಯಲಿರುವುದರಿಂದ ವೈದ್ಯಕೀಯ ಕಾಲೇಜುಗಳಲ್ಲಿ ಮೊದಲ ಸೆಮಿಸ್ಟರ್ ತರಗತಿಗಳ ಆರಂಭದಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಆದರೆ, ಇಂಜಿನಿಯರಿಂಗ್ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳು ನಿಗದಿತ ವೇಳಾಪಟ್ಟಿಯಂತೆ ಆರಂಭವಾಗಲಿವೆ ಸ್ಪಷ್ಟಪಡಿಸಿದರು.
ಇದೇ ವೇಳೆ ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ ಸಚಿವರು, ರಾಷ್ಟ್ರೀಯ ವೈದ್ಯಕೀಯ ಆಯೋಗ ಈ ವರ್ಷ ಕರ್ನಾಟಕದ ವಿವಿಧ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 550 ಪದವಿ (UG) ಹಾಗೂ 572 ಸ್ನಾತಕೋತ್ತರ (PG) ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.
11 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 550 ಎಂ.ಬಿ.ಬಿ.ಎಸ್. ಸೀಟುಗಳು ಹೆಚ್ಚಳವಾಗಿದ್ದು, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಯಾದಗೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ತಲಾ 50 ಹೆಚ್ಚುವರಿ ಸೀಟುಗಳನ್ನು ಪಡೆದಿವೆ. ಪ್ರಸ್ತುತ ಈ ಎರಡೂ ಕಾಲೇಜುಗಳಲ್ಲಿ ತಲಾ 150 ಎಂ.ಬಿ.ಬಿ.ಎಸ್. ಸೀಟುಗಳಿವೆ.
ಅದೇ ರೀತಿ ರಾಜ್ಯದ 23 ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟು 572 ಪಿಜಿ ಸೀಟುಗಳನ್ನು ಹೆಚ್ಚಿಸಲು ಎನ್ಎಂಸಿ ಅನುಮತಿ ನೀಡಿದೆ. ಈ ಪೈಕಿ ಬಳ್ಳಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ 38, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ 17, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ 15, ಕೊಪ್ಪಳ ಕಿಮ್ಸ್ಗೆ 19 ಮತ್ತು ಯಾದಗಿರಿ ಯಿಮ್ಸ್ಗೆ 69 ಪಿಜಿ ಸೀಟುಗಳು ಮಂಜೂರಾಗಿವೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ 572 ಪಿಜಿ ಸೀಟುಗಳಲ್ಲಿ 158 ಹಾಗೂ 550 ಯುಜಿ ಸೀಟುಗಳಲ್ಲಿ 100 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.