ನವದೆಹಲಿ/ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವನ್ನು ಶುಕ್ರವಾರ ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನ ಸದಾ ಗೌರವ, ಕರುಣೆ ಮತ್ತು ಸಾಮಾಜಿಕ ನ್ಯಾಯದ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಜೀವನದ ಆರಂಭದಿಂದಲೇ ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಾರೆ. ಸರಳ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದು, ತಮ್ಮ ಆಡಳಿತಾವಧಿಯಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ಹಿಂದುಳಿದವರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ತಿಳಿಸಿದ್ದಾರೆ.
ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷವು ಅವರ ಸಾರ್ವಜನಿಕ ಸೇವೆಗೆ ಸದಾ ಕೃತಜ್ಞವಾಗಿದೆ. ಸಿದ್ದರಾಮಯ್ಯ ಅವರಿಗೆ ಉತ್ತಮ ಆರೋಗ್ಯ ಹಾಗೂ ಜನಸೇವೆಯಲ್ಲಿ ಮುಂದುವರಿದ ಯಶಸ್ಸು ದೊರೆಯಲಿ ಎಂದು ಹಾರೈಸಿದ್ದಾರೆ.