ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಬಿಗ್ ರಿಲೀಫ್ ನೀಡಿದೆ.
ಲೋಕಾಯುಕ್ತ ವಿಶೇಷ ತನಿಖಾ ತಂಡ ದಾಖಲಿಸಿದ್ದ ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಹಲವರನ್ನು ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.
ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ರೆಡ್ಡಿ ಸೇರಿದಂತೆ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.
ಜನಾರ್ದನ ರೆಡ್ಡಿ ಅವರೊಂದಿಗೆ ಮೆಹಫೂಜ್ ಅಲಿ ಖಾನ್, ಉದ್ಯಮಿಗಳಾದ ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್ ಹಾಗೂ ಟ್ರೈಡೆಂಟ್ ಮೈನಿಂಗ್ ಕಂಪನಿ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನೂ ಸಹ ಕೋರ್ಟ್ ವಜಾಗೊಳಿಸಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಯಾವುದೇ ರೀತಿ ಅಗತ್ಯ ಅನುಮತಿಗಳನ್ನು ಪಡೆಯದೇ, ಸರ್ಕಾರಕ್ಕೆ ಪಾವತಿಸಬೇಕಿದ್ದ ರಾಜಧನ(ರಾಯಲ್ಟಿ) ಹಾಗೂ ಇತರೆ ಶಾಸನಬದ್ಧ ಶುಲ್ಕ ವಂಚಿಸಿ ಆರೋಪಿಗಳು ಭಾರಿ ಪ್ರಮಾಣದ ಅಕ್ರಮ ಎಸಗಿರುವುದು ತನಿಖೆಯಲ್ಲಿ ಬಹಿರಂಗವಾಗಿತ್ತು.
ಆರೋಪಿಗಳು ಒಟ್ಟು 1,25,419 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಕಾನೂನುಬಾಹಿರವಾಗಿ ‘ಎನ್ ಶೇಕ್ಸಾಬ್ ಮೈನ್ಸ್’ ಮತ್ತು ‘ತಿರುಮಲ ಕನ್ವೇಯರ್ ಸಿಸ್ಟಮ್ಸ್’ ಕಂಪನಿಗಳಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.