ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ಸರ್ಕಸ್ ಇನ್ನೂ ಮುಗಿದಿಲ್ಲ! ಇದರ ನಡುವೆಯೇ, ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಸುತ್ತಿನ ಸರ್ಕಸ್ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಯಾಕಂದ್ರೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ವಿವಿಧ ಸರ್ಕಾರಿ ನಿಗಮ-ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಲ್ಲಿರುವ ಶಾಸಕರು ಹಾಗೂ ಮುಖಂಡರಿಗೆ ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಹೊಸಬರಿಗೆ ಅವಕಾಶ?
ಇತ್ತೀಚಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗದೆ ವಂಚಿತರಾದ ಮತ್ತು ಅಸಮಾಧಾನಗೊಂಡಿರುವ 8ಕ್ಕೂ ಹೆಚ್ಚು ಪ್ರಮುಖ ಶಾಸಕರಿಗೆ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಈ ನಿಗಮ-ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ನೀಡಿ ಸಮಾಧಾನಪಡಿಸುವುದು ಉದ್ದೇಶದೊಂದಿಗೆ, ಈಗಾಗಲೇ ನಿಗಮ-ಮಂಡಳಿಗಳಲ್ಲಿ ಎರಡೂವರೆ ವರ್ಷಕ್ಕೂ ಹೆಚ್ಚು ಅವಧಿ ಪೂರೈಸಿರುವ ಶಾಸಕರು ಮತ್ತು ನಾಯಕರನ್ನು ಹುದ್ದೆಯಿಂದ ಕೆಳಗಿಳಿಸಿ, ಸರ್ಕಾರದ ಉಳಿದ ಅವಧಿಗೆ ಹೊಸಬರನ್ನು ನೇಮಕ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೂ ಮುನ್ನ ಸಚಿವ ಸ್ಥಾನದಿಂದ ವಂಚಿತರಾದ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಿರಿಯ ಶಾಸಕರ ತಂಡ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿತ್ತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ, ಹಳೆಯ ಪದಾಧಿಕಾರಿಗಳನ್ನು ಬದಲಿಸಿ ಹೊಸಬರಿಗೆ ಜವಾಬ್ದಾರಿ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಸರ್ಕಾರದ ಕಡೆಯಿಂದ ಈ ಕಠಿಣ ಆದೇಶ ಹೊರಬಿದ್ದಿದೆ. ಅದರಂತೆ, ಅಂದಾಜು ಮೂವತ್ತೈದಕ್ಕೂ ಹೆಚ್ಚು ಶಾಸಕರು ಈಗಾಗಲೇ ನಿಗದಿತ ಅವಧಿ ಪೂರೈಸಿದ್ದು, ಅವರೆಲ್ಲರೂ ಹುದ್ದೆ ತ್ಯಜಿಸುವುದು ಅನಿವಾರ್ಯವಾಗಿದೆ.
ಮುಂದುವರೆದು, ಈ ಬದಲಾವಣೆ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿರುವ ಸಿಎಂ, ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ತಮ್ಮ ಇಲಾಖಾ ವ್ಯಾಪ್ತಿಯ ನಿಗಮ ಮತ್ತು ಮಂಡಳಿಗಳ ಪದಾಧಿಕಾರಿಗಳಿಂದ ರಾಜೀನಾಮೆ ಪತ್ರಗಳನ್ನು ಪಡೆದುಕೊಳ್ಳುವ ಪ್ರಕ್ರಿಯೆ ಆರಂಭಿಸುವಂತೆ ತಿಳಿಸಿದ್ದಾರೆ.