ಬೆಂಗಳೂರು: KPSC ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ JD(S) ಕಾರ್ಯಕರ್ತರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಅಲ್ಲದೆ, ಇದಕ್ಕೆ ಕಾರಣರಾದವರನ್ನು ರಕ್ಷಿಸಲು ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಕೆಪಿಎಸ್ ಸಿ ಹಗರಣದ ಆರೋಪದತ್ತ ಪಕ್ಷವು ಗಮನಹರಿಸುತ್ತಿದೆ ಎಂದು ಹೇಳಿದ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಸಂತ್ರಸ್ತ ಆಕಾಂಕ್ಷಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
ನಾವು ಬೃಹತ್ ಪ್ರಮಾಣದ KPSC ಹಗರಣದತ್ತ ಗಮನಹರಿಸುತ್ತಿದ್ದೇವೆ. ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತಾಗಬೇಕು ಎಂದು ಅವರು ಹೇಳಿದರು. ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ (CBI) ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸುಧಾರಣೆಗಳ ಹೆಸರಿನಲ್ಲಿ ಆಯೋಗವನ್ನು "ಭ್ರಷ್ಟಾಚಾರದ ತಾಣ"ವನ್ನಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ನೇಮಕಾತಿ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂದು ದೂರಿದರು. KPSC ನೇಮಕಾತಿ ಪ್ರಕ್ರಿಯೆಯ ಅಕ್ರಮಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣರಾಗಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
OMR ಶೀಟ್ಗಳ ತಿರುಚುವಿಕೆ ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿದ ಜೆಡಿಎಸ್ ನಾಯಕರು, ನೇಮಕಾತಿಗೆ ಸಂಬಂಧಿಸಿದಂತೆ ಕೋಟ್ಯಂತರ ರೂಗಳ ವ್ಯವಹಾರ ನಡೆದಿದೆ. ಈ ಅಕ್ರಮಗಳು ರಾಜ್ಯಾದ್ಯಂತ ನಿರುದ್ಯೋಗಿ ಯುವಕರ ಆಕಾಂಕ್ಷೆಗಳ ಮೇಲೆ ಪರಿಣಾಮ ಬೀರಿದ್ದು, ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಪಶುವೈದ್ಯರ ಗುಂಪೊಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮತ್ತು ಆಯ್ಕೆ ಪ್ರಕ್ರಿಯೆಯ ತನಿಖೆಗೆ ಆಗ್ರಹಿಸಿದ ನಂತರ ಜುಲೈನಲ್ಲಿ ಈ ಹಗರಣ ಬೆಳಕಿಗೆ ಬಂದಿತು. KPSCಯು ಜನವರಿಯಲ್ಲಿ ನೇಮಕಾತಿ ಪರೀಕ್ಷೆಯನ್ನು ನಡೆಸಿತ್ತು ಮತ್ತು ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 17 ರಂದು ಪ್ರಕಟಿಸಿತ್ತು.
ಇತ್ತೀಚೆಗೆ, ಈ ಅಕ್ರಮಗಳ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಇದರ ಪ್ರಮುಖ ರೂವಾರಿ ಎಂದು ಆರೋಪಿಸಲಾದ ಬಸವರಾಜ ಕನ್ನಾಳೆ ಅವರನ್ನು ಬಂಧಿಸಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯನ್ನು ಹೊಂದಿದ್ದಾಗ ಕೆಪಿಎಸ್ಸಿ (KPSC) ಮೂಲಕ 24 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಹುದ್ದೆಗಳ ನೇಮಕಾತಿಗೆ ಅವಕಾಶ ನೀಡಿದ್ದಕ್ಕಾಗಿ ಖರ್ಗೆ ಅವರು ರಾಜೀನಾಮೆ ನೀಡಬೇಕೆಂದು ಜೆಡಿ(ಎಸ್) ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಆಗ್ರಹಿಸಿದ್ದರು
ಅಂತಿಮ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ AEE ನೇಮಕಾತಿಯಲ್ಲಿ ಒಎಂಆರ್ (OMR) ಹಾಳೆಗಳ ತಿರುಚುವಿಕೆ, ಕಾಣೆಯಾದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಕಾರ್ಯವಿಧಾನದ ಉಲ್ಲಂಘನೆಗಳ ಬಗ್ಗೆ ಕೆಪಿಎಸ್ಸಿ ಒಳಗೆಯೇ ಆತಂಕ ವ್ಯಕ್ತಪಡಿಸಲಾಗಿತ್ತು. ಆದರೂ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಅವಕಾಶ ನೀಡಲಾಗಿತ್ತು. ಕೆಪಿಎಸ್ಸಿ ನೇಮಕಾತಿ ಅಕ್ರಮಗಳಲ್ಲಿ ತಮ್ಮ ನೇರ ಅಥವಾ ಪರೋಕ್ಷ ಪಾತ್ರವಿರುವುದು ಸಾಬೀತಾದರೆ ರಾಜಕೀಯದಿಂದ ನಿವೃತ್ತರಾಗಲು ಸಿದ್ಧ ಎಂದು ಸಚಿವ ಖರ್ಗೆ ಸೋಮವಾರ ಹೇಳಿದ್ದಾರೆ.