ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಹೌದು.. ತರಗತಿ ನಡೆಯುವಾಗಲೇ ಕೊಠಡಿ ಮೇಲ್ಛಾವಣಿ ಕುಸಿತಗೊಂಡಿರುವ ಘಟನೆ ಬಾಗಲಕೋಟೆಯ ಮುಗಳೂಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಬುಧವಾರ ನಡೆದಿದೆ. ಪಾಠ ಕೇಳುವ ವೇಳೆ ಬೆಂಚ್ ಮೇಲೆ ಮೇಲ್ಛಾವಣಿಯ ಕಾಂಕ್ರೀಟ್ ಉದುರಿ ಬಿದ್ದಿದ್ದು, ಈ ವೇಳೆ ಆರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಕಬ್ಬಿಣದ ಸರಳು ಕಾಣುವಷ್ಟು ಶಾಲೆಯ ಕೊಠಡಿ ಹಾಳಾಗಿ ಹೋಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪೋಷಕರ ಆಕ್ರೋಶ ಹೊರಹಾಕಿದ್ದಾರೆ. ಮೇಲ್ಛಾವಣಿ ಕುಸಿದ ಕೊಠಡಿಯಲ್ಲಿ 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿದ್ದರು. 5 ನೇ ತರಗತಿಯ 14 ವಿದ್ಯಾರ್ಥಿಗಳು, 6ನೇ ತರಗತಿಯ 12 ಸೇರಿ ಒಟ್ಟು 26 ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ.
ಮುಗಳೂಳ್ಳಿ ತಾಂಡಾದ 1 ರಿಂದ 6 ನೇ ತರಗತಿ ವರೆಗೆ ಇರುವ ಶಾಲೆಯಲ್ಲಿ ಒಟ್ಟು 53 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯಲ್ಲಿ ಒಟ್ಟು ಮೂರು ಕೊಠಡಿಗಳಿದ್ದು, ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ.
ಮೇಲ್ಛಾವಣಿ ಕುಸಿತದಿಂದ ಐದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪ್ರೇಮ್, ರಾಕೇಶ್, ಮಹೇಶ್, ಸುನಿತಾ, ಸತೀಶ್ಗೆ ಗಾಯವಾಗಿದ್ದು, ಬಿಇಓ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.
ಶಾಲಾ ಕಟ್ಟಡಕ್ಕೆ ತಾತ್ಕಾಲಿಕ ದುರಸ್ತಿ ಮಾಡುವ ಬದಲು ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಪೋಷಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಮಕ್ಕಳ ಜೀವಕ್ಕೆ ಅಪಾಯವಾಗುವ ಮುನ್ನ ಶಾಲೆಯ ಕಟ್ಟಡದ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.