ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ)ಯ ಬಸ್ ಹಾಗೂ ಬೊಲೆರೋ ಪಿಕಪ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿನೇಶ್(38) ಎಂದು ಗುರುತಿಸಲಾಗಿದೆ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಐಸಿಐಸಿಐ ಬ್ಯಾಂಕ್ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಎಟಿಎಂ ವಾಹನ ಡಿಕ್ಕಿ ಹೊಡೆದಿದೆ.
ಗಾಯಾಳುಗಳು ಕೊಡಗು ಹಾಗೂ ಮಂಗಳೂರು ಮೂಲದವರು ಎನ್ನಲಾಗಿದ್ದು, ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.